ಸುಳ್ಯ: ಮನೆಯ ಸುತ್ತಲೂ ಮನಮೋಹಕ ಹಸಿರ ರಾಶಿಯನ್ನು ಹೊದಿಸಿ ಮನೆಯಂಗಳವನ್ನೇ ನಂದನವನವಾಗಿಸಿದ ಕೃಷಿಕರೋರ್ವರು ಮನೆಯ ಪರಿಸರವನ್ನು ಸೊಬಗಿನ ತಾಣವನ್ನಾಗಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಪಂಡಿತ ಪ್ರಶಸ್ತಿ ವಿಜೇತ ಕೃಷಿಕ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕುರಿಯಾಜೆ ತಿರುಮಲೇಶ್ವರ ಭಟ್ ತಮ್ಮ ಮನೆಯಲ್ಲಿಯೇ ವೃಂದಾವನವನ್ನು ಸೃಷ್ಠಿಸಿದ್ದಾರೆ.
ಇವರ ಮನೆಯ ಗೇಟ್ ನ ಸಮೀಪ ಬರುತ್ತಿದ್ದಂತೆಯೇ ಹಾಸಲಾದ ಹಸಿರು ಹುಲ್ಲಿನ ಹೊದಿಕೆ ಸ್ವಾಗತಿಸುತ್ತದೆ. ಮನೆಯಂಗಳಕ್ಕೆ ಪ್ರವೇಶಿಸಿದರೆ ಯಾವುದೋ ಸುಂದರ ಪಾರ್ಕ್ ನ ಒಳಗೆ ಹೊಕ್ಕಂತೆ ಅನುಭವವಾಗುತ್ತದೆ. ಭಿನ್ನ ರೀತಿಯಲ್ಲಿ ಕೃಷಿ ಮಾಡಿ ಕೃಷಿ ಪಂಡಿತ ಪ್ರಶಸ್ತಿ ಪಡೆದ ಇವರು ಮನೆಯ ಸುತ್ತಲೂ ತಮ್ಮ ಹಸಿರ ಪ್ರೇಮವನ್ನು ಪ್ರದರ್ಶಿಸಿ ಮನೆಯನ್ನು ಆಕರ್ಷಣೆಯ ತಾಣವಾಗಿಸಿದ್ದಾರೆ.
ವಿವಿಧ ರೀತಿಯ ಅಲಂಕಾರಿಕ ಗಿಡಗಳು, ತಾವರೆಕೊಳ, ಕಾವೇರಿ ದೇವಿಯ ಮೂರ್ತಿ, ವಿವಿಧ ರೀತಿಯ ಮೂರ್ತಿಗಳು, ಆಕರ್ಷಕ ವಿನ್ಯಾಸದಲ್ಲಿ ರೂಪಿಸಿದ ವಿವಿಧ ತಳಿಯ ಅಲಂಕಾರಿಕ ಗಿಡಗಳು, ಕ್ಯಾಕ್ಟಸ್(ಕಳ್ಳಿ ಗಿಡಗಳು) ಇವರ ಹೂದೋಟವನ್ನು ಸುಂದರವಾಗಿಸಿದೆ. ಎಲ್ಲಿ ಹೋದರೂ ಒಂದು ಗಿಡದೊಂದಿಗೆ ಹಿಂತಿರುಗುವ ತಿರುಮಲೇಶ್ವರ ಭಟ್ಟರು ಕಳೆದ ಎರಡು ದಶಕಗಳಿಗಿಂತಲೂ ಹೆಚ್ಚು ಸಮಯದ ಭಗೀರಥ ಪ್ರಯತ್ನದ ಮೂಲಕ ಮನೆಯಲ್ಲಿ ನಂದನವನವನ್ನು ರೂಪಿಸಿದ್ದಾರೆ.
ಕೃಷಿಕರಾದರೂ ಕಲಾವಿದನ ಮನಸ್ಸನ್ನು ಹೊಂದಿರುವ ಭಟ್ಟರು ತನ್ನ ಮನದ ಕಲ್ಪನೆಗನುಸಾರವಾಗಿ ಪ್ರಕೃತಿಯನ್ನೇ ಸುಂದರವಾಗಿ ಚಿತ್ರಿಸಿದ್ದಾರೆ. ಆಕರ್ಷಕ ತಾವರೆ ಕೊಳ, ಅದರಲ್ಲಿ ಅರಳಿ ನಿಂತಿರುವ ತಾವರೆಗಳು, ಆಶೀರ್ವಾದ ನೀಡುವ ತಾಯಿ ಕಾವೇರಿ, ಸುತ್ತಲೂ, ನವಿಲು, ಗಿಳಿ, ಕೊಕ್ಕರೆ, ಬಾತುಕೊಳಿ, ಆಮೆ, ಮೊಲ, ಜಿಂಕೆ, ಮೀನುಗಳು, ಮೀನು ಹಿಡಿಯುವವರು ಹೀಗೆ ಜೀವಂತಿಕೆ ಮತ್ತು ಲವಲವಿಕೆ ನಲಿದಾಡುವಂತೆ ಭಾಸವಾಗುವ ಹಲವು ಮೂರ್ತಿಗಳನ್ನು ಸ್ಥಾಪಿಸಲಾಗಿದೆ. ಹಸಿರು ಹುಲ್ಲಿನ ನುಣ್ಣನೆಯ ಹೊದಿಕೆಯ ಮಧ್ಯೆ ಕಲ್ಲುಗಳನ್ನು ಹಾಸಿ ಸುಂದರಗೊಳಿಸಿದ್ದಾರೆ.
ಸ್ಟೆಪ್ಪರ್ ಗಿಡಗಳು, ಬೋನ್ಸಾಯಿ ಗಿಡಗಳು, ಗೋಳ್ಡನ್ ಸೈಪ್ರಸ್, ತೂಜಾ, ಲಂಡನ್ ಪೈನ್ ಹೀಗೆ ವಿವಿಧ ತಳಿಯ ಅಲಂಕಾರಿಕ ಗಿಡಗಳು ತಿರುಮಲೇಶ್ವರ ಭಟ್ಟರ ಹೂದೋಟವನ್ನು ಅಲಂಕರಿಸಿದೆ. ಜೊತೆಗೆ ವಿವಿಧ ಜಾತಿಯ ಹೂವಿನ ಗಿಡಗಳೂ ಇವೆ. ಕೇರಳ ಮತ್ತು ರಾಜ್ಯದ ವಿವಿಧ ಕಡೆಗಳಿಂದ ತಿರುಮಲೇಶ್ವರ ಭಟ್ ಅಲಂಕಾರಿಕ ಗಿಡಗಳನ್ನು ತಂದು ತನ್ನ ಹೋದೋಟವನ್ನು ಆಕರ್ಷಕವಾಗಿರಿಸಿದ್ದಾರೆ.
ಕ್ಯಾಕ್ಟಸ್ ಮೋಹ- ಕಲ್ಲುಗಳ ಆಗರ: ತಿರುಮಲೇಶ್ವರ ಭಟ್ಟರ ಕ್ಯಾಕ್ಟಸ್ ಪ್ರೇಮವೂ ವಿಶೇಷವಾದುದು. ಸುಮಾರು 350 ಕ್ಕೂ ಹೆಚ್ಚು ಕ್ಯಾಕ್ಟಸ್(ಕಳ್ಳಿ)ಗಿಡಗಳನ್ನು ಬೆಳೆದು ಗಮನ ಸೆಳೆದಿದ್ದಾರೆ. ಕಳ್ಳಿ ಗಿಡಗಳೆಂದರೆ ಇವರಿಗೆ ಅಚ್ಚುಮೆಚ್ಚು. ಇದರ ಸಂಗ್ರಹಕ್ಕಾಗಿ ಅವರು ಸಾಹಸವನ್ನೇ ಮೆರೆದಿದ್ದಾರೆ. ಸುಂದರವಾದ ಹೂದಾನಿಗಳಲ್ಲಿ, ಕುಂಡಗಳಲ್ಲಿ ಅವುಗಳನ್ನು ಬೆಳೆಸಿದ್ದಾರೆ. ಕ್ಯಾಕ್ಟಸ್ ಬೆಳೆಸಲು ವಿಶೇಷ ಶ್ರಮವನ್ನೇ ವಹಿಸಬೇಕಾಗಿದೆ. ಮಳೆಯ ನೀರು ತಾಗದಂತೆ ತಾರಸಿಯನ್ನೂ ಮಾಡಬೇಕಾಗುತ್ತದೆ. ಕ್ಯಾಕ್ಟಸ್ ಗಳು ಅನೇಕ ವರ್ಷಗಳ ಕಾಲ ಉಳಿದು ಸುಂದರವಾಗಿ ಕಾಣುತ್ತದೆ. ಮನೆಯ ಸುತ್ತಲೂ, ವರಾಂಡಾ, ತಾರಸಿಯ ಮೇಲೆ, ದಾರಿಯ ಇಕ್ಕೆಲಗಳಲ್ಲಿ ಹೀಗೆ ಎಲ್ಲೆಂದರಲ್ಲಿ ಕ್ಯಾಕ್ಟಸ್ ಸೌಂದರ್ಯವೇ ರಾರಾಜಿಸುತ್ತದೆ. ಕೇರಳ, ಬೆಂಗಳೂರುಗಳಿಂದ ವಿವಿಧ ಜಾತಿಯ ಕ್ಯಾಕ್ಟಸ್ ಗಳನ್ನು ತರುತ್ತಾರೆ. ಮನಮೋಹಕ ಕಲ್ಲುಗಳ ಸಂಗ್ರಹ ಇವರ ಮತ್ತೊಂದು ವೈಶಿಷ್ಟ್ಯ. ಅದರಲ್ಲೂ ನೀರಿನಲ್ಲಿ ತೇಲುವ ಕಲ್ಲುಗಳು, ಬಿಳಿ ಕಲ್ಲುಗಳು ಗಮನ ಸೆಳೆಯುತ್ತದೆ. ನೇಪಾಳ, ಡಿಂಡಿಗಲ್, ಅಜಂತಾ, ಕೇರಳ ಗಳಿಂದ ಕಲ್ಲುಗಳನ್ನು ತಂದಿದ್ದಾರೆ. ಸ್ಥಳೀಯವಾಗಿ ಹೊಳೆಗಳಿಂದಲೂ ಸುಂದರವಾದ ಕಲ್ಲುಗಳನ್ನು ಹೆಕ್ಕಿ ತಂದು ಸಂಗ್ರಹಿಸಿಟ್ಟಿದ್ದಾರೆ.
ಕೃಷಿ ಪಂಡಿತರ ತೋಟದಲ್ಲಿ ಹಣ್ಣುಗಳ ವೈವಿಧ್ಯತೆ: ತನ್ನ ಕೃಷಿ ಮತ್ತು ಹೂ ದೋಟದ ಜೊತೆಗೆ ವೈವಿಧ್ಯಮಯ ಹಣ್ಣುಗಳ ವಿಸ್ಮಯ ಲೋಕವನ್ನು ಸೃಷ್ಠಿಸಿ ಗಮನ ಸೆಳೆಯುತ್ತಾರೆ ಕರ್ನಾಟಕ ಸರ್ಕಾರದ ಕೃಷಿ ಪಂಡಿತ ಪ್ರಶಸ್ತಿಯನ್ನು ಪಡೆದಿರುವ ಕೃಷಿಕ ತಿರುಮಲೇಶ್ವರ ಭಟ್. ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿರುವ ಹಲವು ಹಣ್ಣುಗಳೂ ಕರಾವಳಿಯ ಈ ಮಣ್ಣಿನಲ್ಲಿ ಫಲವತ್ತಾಗಿ ಬೆಳೆಯಬಲ್ಲುದು ಎಂದು ಇವರ ಪ್ರಯೋಗ ತೋರಿಸಿ ಕೊಟ್ಟಿದೆ.
ಸುಮಾರು ಹತ್ತಕ್ಕೂ ಹೆಚ್ಚು ದೇಶ ವಿದೇಶದ ತಳಿಯ ಹಲಸು, ಹತ್ತಕ್ಕೂ ಹೆಚ್ಚು ಬಗೆಯ ವೈವಿಧ್ಯಮಯ ಮಾವು ತಳಿಗಳು, ರಂಬೂಟಾನ್, ಮ್ಯಾಂಗೋ ಸ್ಟೇನ್, ಮಿರಾಕ್ಕಲ್ ಪ್ರೂಟ್ಸ್, ಡ್ರಾಗನ್ ಫ್ರೂಟ್ಸ್, ಹೀಗೆ ಸುಮಾರು ಒಂದು ಎಕರೆ ಸ್ಥಳವನ್ನು ಪೂರ್ತಿಯಾಗಿ ಹಣ್ಣು ಬೆಳೆಯುವುದಕ್ಕಾಗಿಯೇ ಮೀಸಲಿಟ್ಟಿದ್ದು 25ಕ್ಕೂ ಹೆಚ್ಚು ವಿಧದ ಹಣ್ಣುಗಳನ್ನು ಬೆಳೆಸಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ ಮತ್ತು ವಿದೇಶಗಳಾದ ಮಲೇಶಿಯಾ. ಥಾಯ್ಲ್ಯಾಂಡ್ ಗಳಿಂದ ತಂದಿರುವ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ಅಚ್ಚು ಕಟ್ಟಾಗಿ ನೆಟ್ಟು ಬೆಳೆಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಇವರು ನಿರಂತರವಾಗಿ ನಡೆಸಿದ ಪ್ರಯತ್ನದ ಫಲವಾಗಿ ಇಂದು ಮನಮೋಹಕವಾದ ಹಣ್ಣಿನ ತೋಟ ಸೃಷ್ಠಿಯಾಗಿದೆ. ಇವರು ಭೇಟಿ ನೀಡಿದ ಸ್ಥಳಗಳಿಂದೆಲ್ಲಾ ಒಂದಲ್ಲಾ ಒಂದು ರೀತಿಯ ಹಣ್ಣಿನ ಗಿಡಗಳನ್ನು ಸಂಗ್ರಹಿಸಿ ತರುತ್ತಾರೆ.
ಸಾವಯವ ಕೃಷಿಯ ಸರದಾರ: ಕಳೆದ ಹಲವು ದಶಕಗಳಿಂದ ಸಾವಯವ ಕೃಷಿಯನ್ನು ನೆಚ್ಚಿಕೊಂಡಿರುವ ತಿರುಮಲೇಶ್ವರ ಭಟ್ಟರ ಕೃಷಿ ಭೂಮಿ ಮತ್ತು ತೋಟ ಒಂದು ಸುಂದರ ನಂದನವನದಂತೆ ನಳ ನಳಿಸುತಿದೆ. ಮೂರು ಎಕರೆ ಅಡಕೆ ತೋಟ ಮತ್ತು ಮೂರು ಎಕರೆ ರಬ್ಬರ್ ಕೃಷಿಯನ್ನು ನಡೆಸುತ್ತಿರುವ ಇವರು ಎಲ್ಲಾ ತರಹದ ಕೃಷಿಯನ್ನೂ ಮಾಡಿ ಯಶಸ್ವಿಯಾಗಿದ್ದಾರೆ. ಆದುದರಿಂದಲೇ ಇವರ ಸಮಗ್ರ ಕೃಷಿ ಮತ್ತು ಬೆಳೆಗಳ ವೈವಿದ್ದೀಕರಣವನ್ನು ಮೆಚ್ಚಿ 2007-2008ನೇ ಸಾಲಿನಲ್ಲಿ ಸರ್ಕಾರ ಇವರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಿದೆ. ಸಾವಯವ ಕೃಷಿಯನ್ನು ಅಳವಡಿಸಿ ಅಡಕೆ, ತೆಂಗು, ಕಾಳು ಮೆಣಸು, ರಬ್ಬರ್, ಬಾಳೆ, ಕೊಕ್ಕೊ, ಜಾಯಿ ಕಾಯಿ, ದೇಶಿ ಹಾಗು ವಿದೇಶಿ ಹಣ್ಣುಗಳನ್ನು ಸಮರ್ಪಕವಾಗಿ ಬೆಳೆಸಿ ಇವರು ಪ್ರಶಸ್ತಿಗೆ ಪಾತ್ರರಾಗಿದ್ದರು.
ಪ್ರಶಸ್ತಿ ಮುಡಿಗೇರಿ ಸುಮಾರು ಒಂದು ದಶಕದ ಬಳಿಕವೂ ತನ್ನ ಕೃಷಿ ಸಾಧನೆಯನ್ನು ಅದೇ ರೀತಿ ಮುಂದುವರಿಸಿಕೊಂಡು ಬಂದಿದ್ದಾರೆ. ವಿವಿಧ ತಳಿಯ ಅಡಕೆ ಗಿಡಗಳು, ಹಲವು ವಿದಧ ಕಾಳು ಮೆಣಸಿನ ಗಿಡಗಳು ಇವರ ತೋಟವನ್ನು ವೈವಿಧ್ಯಮಯವನ್ನಾಗಿಸುತ್ತದೆ. ಅದು ಕೃಷಿ ಗಿಡಗಳೇ ಇರಲಿ, ಹಣ್ಣಿನ ಗಿಡಗಳೇ ಇರಲಿ ವಿಶೇಷವಾದುದನ್ನು ಎಲ್ಲಿ ನೋಡಿದರೂ ಅದನ್ನು ತಂದು ತನ್ನ ತೋಟದಲ್ಲಿ ಬೆಳೆಸುವುದು ಇವರ ಹವ್ಯಾಸ. ಜೊತೆಗೆ ಹೈನುಗಾರಿಕೆಯನ್ನೂ ನೆಚ್ಚಿ ಕೊಂಡಿರುವ ಇವರು ಗೀರ್ ತಳಿಯ ಹಸುಗಳನ್ನೂ, ಎಮ್ಮೆಗಳನ್ನೂ ಸಾಕಿ ಲಾಭದಾಯಕ ಹೈನುಗಾರಿಕೆಯನ್ನು ನಡೆಸುತ್ತಿದ್ದಾರೆ. ತನ್ನ ಮನೆ ಮತ್ತು ಪರಿಸರದಂತೆ ತನ್ನ ತೋಟ ಮತ್ತು ಸ್ಥಳವನ್ನೂ ಸ್ವಚ್ಛ ಮತ್ತು ಆಕರ್ಷಕವಾಗಿರಿಸಿದ ತಿರುಮಲೇಶ್ವರ ಭಟ್ಟರ ಕೃಷಿ ಮತ್ತು ಪರಿಸರ ಸುಂದರ ಕಾವ್ಯದದಂತೆ ಆಕರ್ಷಕವಾಗಿದೆ. ಸ್ವಚ್ಛತೆಗೆ, ಸೌಂದರ್ಯಕ್ಕೆ ಮಾದರಿಯನ್ನು ಒದಗಿಸಿದ್ದಾರೆ.