ಮಡಿಕೇರಿ: ಕೊಡಗಿನಲ್ಲಿ ಸಹಸ್ರಾರು ಮಂದಿ ಮಾಜಿ ಸೈನಿಕರಿದ್ದು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ಕೆಲವು ದಿನಗಳ ಹಿಂದೆ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕುಂದುಕೊರತೆ ಸಭೆ ಕರೆದ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸಮಸ್ಯೆಗಳನ್ನು ಆಲಿಸಿದ್ದಾರೆ.
ಮಡಿಕೇರಿಯ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಜಿ ಸೈನಿಕರ ಅಹವಾಲನ್ನು ಆಲಿಸಿ ಮನವಿ ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಅವರು ದೇಶ ಸೇವೆ ಮಾಡಿದ ಸೈನಿಕರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಮಾಜಿ ಸೈನಿಕರ ಕಲ್ಯಾಣಕ್ಕಾಗಿ ಎಲ್ಲ್ಲ ರೀತಿಯ ಸಹಕಾರ ನೀಡಲಾಗುವುದು ಎಂಬ ಭರವಸೆ ನೀಡಿದರು.
ಮಾಜಿ ಸೈನಿಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಮೇಜರ್ ಜನರಲ್ ಬಿ.ಎ.ಕಾರ್ಯಪ್ಪ(ನಿವೃತ್ತ) ಅವರು ಮಾತನಾಡಿ ದೇಶ ಸೇವೆ ಮಾಡಿದ ಮಾಜಿ ಸೈನಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕಿದೆ. ಮಾಜಿ ಸೈನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಕೊಡಗು ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರದಿಂದ ಹದಿನೈದು ಸಾವಿರದವರೆಗೆ ಮಾಜಿ ಸೈನಿಕರು, ಸೈನಿಕರ ಅವಲಂಬಿತರು ವಾಸವಾಗಿದ್ದಾರೆ. ಇದರಲ್ಲಿ ಎಲ್ಲಾ ಮಾಜಿ ಸೈನಿಕರು ಕಡಿಮೆ ಪಕ್ಷ 15 ರಿಂದ 40 ವರ್ಷದವರೆಗೆ ಸೇವೆ ಸಲ್ಲಿಸಿ, ಜಿಲ್ಲೆಗೆ ಬಂದು ನೆಲೆಸಿರುತ್ತಾರೆ. ಮಾಜಿ ಸೈನಿಕರು ಸರ್ಕಾರಿ ಸವಲತ್ತುಗಳಿಂದ ವಂಚಿತರಾಗಿದ್ದು, ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಎಂದು ಅವರು ಮನವಿ ಮಾಡಿದರು.
ಮಾಜಿ ಸೈನಿಕರಿಗೆ ಸರ್ಕಾರದಿಂದ ಕೊಡುತ್ತಿರುವ ವೈದ್ಯಕೀಯ ಸೌಲಭ್ಯ, ಖಾಯಂ ನಿವೇಶನಕ್ಕಾಗಿ ಜಾಗ ಗುರುತಿಸುವುದು, ಸೈನಿಕ ಶಾಲೆಯಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಶೇ.10 ರಷ್ಟು ಮೀಸಲಾತಿ ನೀಡುವುದು, ಜಿಲ್ಲಾ ಕೇಂದ್ರದಲ್ಲಿ ಮಾಜಿ ಸೈನಿಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಸ್ಥಳಾವಕಾಶ ಕಲ್ಪಿಸುವುದು, ಮಾಜಿ ಸೈನಿಕರ ಮನೆ ಕಂದಾಯದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವುದು, ಮಾಜಿ ಸೈನಿಕರು 50-53ರಡಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವುದು, ಮಾಜಿ ಸೈನಿಕರು, ವಿಧವೆಯರು, ಸೈನಿಕರ ಅವಲಂಬಿತರು ಸರ್ಕಾರದ ಜಮೀನು ಸ್ವಾಧೀನ ಇದ್ದಲ್ಲಿ ಅದನ್ನು ತೆರವುಗೊಳಿಸದಿರುವುದು ಹೀಗೆ ನಾನಾ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.