ಮಡಿಕೇರಿ:ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕ ಫಲಾನುಭವಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಸಕಾಲದಲ್ಲಿ ನೀಡಬೇಕೆನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.20 ರಂದು ಪ್ರತಿಭಟನೆ ನಡೆಸಲು ಸಿಐಟಿಯು ಸಂಯೋಜಿತ ಸಂಘಟನೆ ಕೊಡಗು ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಸಿ. ಸಾಬು, ಕಳೆದ ಅನೇಕ ವರ್ಷಗಳಿಂದ ಕಟ್ಟಡ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಾ ಬಂದಿದ್ದರು ಸರ್ಕಾರ ನಿರ್ಲಕ್ಷ್ಯ ಮನೋಭಾವನೆ ತಾಳಿದೆಯೆಂದು ಆರೋಪಿಸಿದರು. ಸೆಸ್ ರೂಪದಲ್ಲಿ 5 ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸುತ್ತಿರುವ ಸರ್ಕಾರ ಕಾರ್ಮಿಕರಿಗಾಗಿ ಯಾವುದೇ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಕಾರ್ಮಿಕರ ಕಲ್ಯಾಣ ಮಂಡಳಿ ಕೆಲವು ಕೊರತೆಗಳನ್ನು ತುಂಬಲು ಮುಂದಾಗಿರುವುದು ಸ್ವಾಗತಾರ್ಹವಾದರು ವಿವಾಹ ಯೋಜನೆ, ಸಲಕರಣೆ, ಪಿಂಚಣಿ, ಮರಣ ನಿಧಿ ಸೇರಿದಂತೆ ಇನ್ನು ಹಲವು ಅನುಕೂಲತೆಗಳನ್ನು ಕಲ್ಪಿಸದೆ ವಿಳಂಬ ಧೋರಣೆ ತೋರುತ್ತಿರುವುದು ಖಂಡನೀಯವೆಂದರು.
ವಿವಾಹ, ಪಿಂಚಣಿ, ವೈದ್ಯಕೀಯ ಸೌಲಭ್ಯಗಳನ್ನು ಯಾವುದೇ ಷರತ್ತುಗಳಿಲ್ಲದೆ ತಕ್ಷಣ ಬಿಡುಗಡೆ ಮಾಡಬೇಕು, ಕಲ್ಯಾಣ ಮಂಡಳಿಯು ಎಲ್ಲಾ ಹಂತಗಳಲ್ಲು ಫಲಾನುಭವಿಗಳ ನೋಂದಣಿ, ನವೀಕರಣ, ಸೌಲಭ್ಯಗಳ ವಿತರಣೆಗೆ ವ್ಯವಸ್ಥಿತ ಕಛೇರಿಯನ್ನು ತೆರೆಯಬೇಕು, ಕಾರ್ಮಿಕ ಇಲಾಖೆಗಳಲ್ಲಿ ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಅರ್ಹ ಯೋಜನೆಗಳ ಹಣ ಮಂಜೂರಾಗುವಂತೆ ನೋಡಿಕೊಳ್ಳಬೇಕು, ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ ದಿನಾಂಕದಿಂದಲೆ ಹಿಂಬಾಕಿ ಸಹಿತ ಮಾಸಿಕ ಪಿಂಚಣಿ 3 ಸಾವಿರ ರೂ. ಹೆಚ್ಚಿಸಿ ಮಂಜೂರು ಮಾಡಬೇಕು, ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು, ಕಾರ್ಮಿಕರ ಮಕ್ಕಳಿಗಾಗಿ ಜಾರಿಯಲ್ಲಿರುವ ಶೈಕ್ಷಣಿಕ ಸೌಲಭ್ಯಗಳನ್ನು ಅನುಷ್ಠಾನಗೊಳಿಸಬೇಕು, ವಸತಿ ಯೋಜನೆಯನ್ನು ಜಾರಿಗೆ ತರಬೇಕು, ರಾಜ್ಯದಲ್ಲಿ ಶೀಘ್ರ ಮರಳು ನೀತಿಯನ್ನು ಜಾರಿಗೆ ತರಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ಮಾ.20 ರಂದು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎ.ಸಿ. ಸಾಬು ತಿಳಿಸಿದರು.
ಜಿಲ್ಲೆಯಲ್ಲಿ ಮರಳಿನ ಕೊರತೆಯಿಂದಾಗಿ ಜನಸಾಮಾನ್ಯರು ಹಾಗೂ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಅಲ್ಲದೆ, ಎಂ ಸ್ಯಾಂಡ್ ದುಬಾರಿ ದರಕ್ಕೆ ಮಾರಾಟವಾಗುತ್ತಿದೆ. ಆದ್ದರಿಂದ ಸರ್ಕಾರ ತಕ್ಷಣ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಮರಳು ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಕೊಡಗು ಜಿಲ್ಲೆಯನ್ನು ಸೂಕ್ಷ್ಮ ಪರಿಸರ ವಲಯ ಪ್ರದೇಶ ವ್ಯಾಪ್ತಿಗೆ ತರುವುದನ್ನು ಸಂಘಟನೆ ವಿರೋಧಿಸಲಿದೆ ಎಂದು ಎ.ಸಿ.ಸಾಬು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಖಜಾಂಚಿ ಸಿ.ಎ. ಹಮೀದ್ ಉಪಸ್ಥಿತರಿದ್ದರು.