ಸೋಮವಾರಪೇಟೆ: ಪ್ರವಾಸಿ ತಾಣ ಮಲ್ಲಳ್ಳಿ ಜಲಪಾತದಲ್ಲಿ ಮುಳುಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮೂಲತಃ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿಯಾಗಿದ್ದು, ಪ್ರಸ್ತುತ ಮಡಿಕೇರಿಯ ಟಿ.ಜಾನ್ ಎಸ್ಟೇಟ್ ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ನವೀನ್(25) ಎಂಬಾತನೇ ಜಲಪಾತದಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದು, ಸಂಜೆ ವೇಳೆಗೆ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ.
ಅದೇ ಎಸ್ಟೇಟ್ ನಲ್ಲಿ ಚಾಲಕನಾಗಿರುವ ವೆಂಕಟೇಶ್ ಎಂಬಾತನೊಂದಿಗೆ ಬೈಕ್ ನಲ್ಲಿ ಇಂದು ಮಧ್ಯಾಹ್ನ ಮಲ್ಲಳ್ಳಿ ಜಲಪಾತಕ್ಕೆ ತೆರಳಿದ್ದಾರೆ. 12.30ರ ಸುಮಾರಿಗೆ ಬಟ್ಟೆ ಬಿಚ್ಚಿ ಈರ್ವರೂ ನೀರಿಗಿಳಿದಿದ್ದಾರೆ. ಈ ಸಂದರ್ಭ ನವೀನ್ ಅಪಾಯಕಾರಿ ಸ್ಥಳಕ್ಕೆ ತೆರಳಿದ್ದು, ಕ್ಷಣಮಾತ್ರದಲ್ಲಿ ನೀರಿನಲ್ಲಿ ಕಣ್ಮರೆಯಾಗಿದ್ದಾನೆ.
ತಕ್ಷಣ ಸ್ಥಳೀಯರಿಗೆ ವಿಷಯ ತಿಳಿಸಿದ್ದು, ನಂತರ ಸೋಮವಾರಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳೀಯರಾದ ವೆಂಕಟೇಶ್, ಉಲ್ಲಾಸ್ ಸೇರಿದಂತೆ ಗ್ರಾಮಸ್ಥರು ಹಾಗೂ ಸೋಮವಾರಪೇಟೆಯ ಆಟೋ ಚಾಲಕ ಹಸನಬ್ಬ, ಪ್ರಕಾಶ್,ಮೂರ್ತಿ ಅವರುಗಳ ಸಹಕಾರದಿಂದ ಮೃತದೇಹವನ್ನು ನೀರಿನಿಂದ ಹೊರತೆಗೆದು ಸೋಮವಾರಪೇಟೆಯ ಶವಾಗಾರಕ್ಕೆ ಸಾಗಿಸಿದರು.
ಘಟನೆಯ ಬಗ್ಗೆ ಮೃತನ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದ್ದು, ಬೆಂಗಳೂರಿನಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದಾರೆ. ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.