ಮಡಿಕೇರಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೆೇತೃತ್ವದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವುದಾಗಿ ಪಕ್ಷದ ಪ್ರಭಾರ ಜಿಲ್ಲಾಧ್ಯಕ್ಷರಾದ ಟಿ.ಪಿ.ರಮೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯನ್ನು ನಡೆಸಲಾಗಿದ್ದು, ಪಕ್ಷದ ಬಲವರ್ಧನೆಗಾಗಿ ಬೂತ್ ಮಟ್ಟದಿಂದಲೆ ಚಟುವಟಿಕೆ ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದರು.
104 ಗ್ರಾ.ಪಂ, 3 ಪ.ಪಂ ಮತ್ತು ಮಡಿಕೆೇರಿ ನಗರಸಭಾ ವ್ಯಾಪ್ತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೆೇತೃತ್ವದಲ್ಲಿ ಪ್ರವಾಸ ಕೈಗೊಳ್ಳಲಾಗುವುದು. ಏಪ್ರಿಲ್ ತಿಂಗಳಿನಲ್ಲಿ ಆರಂಭಗೊಳ್ಳುವ ಪಕ್ಷದ ಬಲವರ್ಧನೆಯ ಕಾರ್ಯಕ್ರಮಗಳಲ್ಲಿ ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯರು, ನಿಗಮ ಮಂಡಳಿಗಳ ಪದಾಧಿಕಾರಿಗಳು ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದು ಟಿ.ಪಿ.ರಮೇಶ್ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಮ್ ಅವರು ಅಭಿವೃದ್ಧಿ ಪರ ಚಿಂತನೆಯೊಂದಿಗೆ ಹೆಚ್ಚು ಚಟುವಟಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಇವರ ಕಾರ್ಯವೈಖರಿ ಬಗ್ಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಶ್ಲಾಘನೆ ವ್ಯಕ್ತಪಡಿಸುತ್ತದೆ ಎಂದರು. ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗಾಗಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಗಳು ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ 200 ಕೋಟಿ ರೂ. ಬಿಡುಗಡೆ ಆದಂತಾಗಿದೆ ಎಂದರು. ವಿಮಾನ ಇಳಿದಾಣ, ರಕ್ತನಿಧಿ ಕೇಂದ್ರ, ಸವಿರುಚಿ ಸಂಚಾರಿ ಕ್ಯಾಂಟೀನ್ ಹಾಗೂ ವೀರಾಜಪೇಟೆಯಲ್ಲಿ ಕಾರಾಗೃಹ ನಿರ್ಮಾಣ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಜಿಲ್ಲೆಗಾಗಿ ಘೋಷಿಸಿದ ವಿಶೇಷ ಕೊಡುಗೆಗಳಾಗಿವೆ ಎಂದು ಟಿ.ಪಿ. ರಮೇಶ್ ತಿಳಿಸಿದರು.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೆ.ಎಂ. ಲೋಕೇಶ್ ಅವರನ್ನು ಈಗಾಗಲೆ ಅಮಾನತುಗೊಳಿಸಲಾಗಿದ್ದು, ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಕೆಪಿಸಿಸಿಗೆ ಮನವಿ ಸಲ್ಲಿಸಲು ಸಭೆ ನಿರ್ಣಯ ಕೈಗೊಂಡಿದೆ ಎಂದರು. ಡಾ. ಕಸ್ತೂರಿ ರಂಗನ್ ವರದಿ ಬಗ್ಗೆ 2014ರ ಮೇ 15 ರಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆಯನ್ನು ಸಲ್ಲಿಸಿದೆ. ಆದರೆ, ಮತ್ತೆ ಕೇಂದ್ರ ಸರ್ಕಾರ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಸೂಕ್ಷ್ಮ ಪರಿಸರ ವಲಯದ ಕುರಿತು ಅಂತಿಮ ತೀರ್ಮಾನವನ್ನು ಕೇಂದ್ರ ಸರ್ಕಾರವೆ ತೆಗೆದುಕೊಳ್ಳಬೇಕೆಂದು ತಿಳಿಸಿ ರಮೇಶ್, ಜಿಲ್ಲೆಯಲ್ಲಿ ಗುರುತಿಸಲ್ಪಟ್ಟಿರುವ 55 ಗ್ರಾಮಗಳಲ್ಲಿ 40 ಗ್ರಾಮಗಳು ಜನವಸತಿಯಿಂದ ಕೂಡಿವೆ. ಕೇರಳದ ಮಾದರಿಯಲ್ಲಿ ಕೊಡಗಿಗೂ ರಿಯಾಯಿತಿ ನೀಡುವ ಮೂಲಕ ನ್ಯಾಯದೊರಕಿಸಬೇಕೆಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಅವರು ಹೇಳಿದರು.
ಪ್ರವಾಸೋದ್ಯಮದ ಬೆಳವಣಿಗೆಯ ದೃಷ್ಟಿಯಿಂದ ಜಿಲ್ಲೆಗೆ ಹಿರಿಯ ಪ್ರವಾಸೋದ್ಯಮ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಈಗಾಗಲೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಶಾಸಕರು ನಡೆಸದೆ ಇರುವುದರಿಂದ ತಹಸೀಲ್ದಾರರು ಅಗತ್ಯ ಕ್ರಮ ಕೈಗೊಳ್ಳಬಹುದಾದರೂ ಅಧಿಕಾರಿಗಳು ಯಾವುದೇ ಪ್ರಕ್ರಿಯೆಯಲ್ಲಿ ತೊಡಗದೆ ಇರುವುದರಿಂದ ಈ ಬಗ್ಗೆ ಉಸ್ತುವಾರಿ ಸಚಿವರ ಗಮನ ಸೆಳೆಯಲಾಗುವುದೆಂದರು.
94(ಸಿ) ಅಡಿ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಈಗಾಗಲೆ ತಿಳಿಸಲಾಗಿದೆಯೆಂದು ಟಿ.ಪಿ.ರಮೇಶ್ ಹೇಳಿದರು. ಜಿಲ್ಲೆಯಲ್ಲಿ ಕೆಲವು ಅಧಿಕಾರಿಗಳು ಕರ್ತವ್ಯ ಲೋಪವೆಸಗುತ್ತಿದ್ದು, ಇವರುಗಳನ್ನು ಬದಲಾಯಿಸಿ ಕ್ರಿಯಾಶೀಲ ಅಧಿಕಾರಿಗಳನ್ನು ನೇಮಿಸುವಂತೆ ಉಸ್ತುವಾರಿ ಸಚಿವರಿಗೆ ಲಿಖಿತ ದೂರು ನೀಡಲಾಗುವುದೆಂದರು.
ಗೋಣಿಕೊಪ್ಪಲು ಗ್ರಾ.ಪಂ.ಯಲ್ಲಿ 14 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಕೇವಲ 7 ಸಂಖ್ಯಾ ಬಲ ಹೊಂದಿರುವ ಇತರ ಸದಸ್ಯರು ಕಾನೂನು ಉಲ್ಲಂಘಿಸಿ ಪಂಚಾಯ್ತಿ ಕಟ್ಟಡ ಕೆಡವಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಬಹುಮತಕ್ಕೆ ಮಾನ್ಯತೆ ನೀಡದೆ ಏಕಪಕ್ಷೀಯವಾಗಿ ಕ್ರಮ ಕೈಗೊಂಡಿರುವ ಬಗ್ಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಗಮನ ಸೆಳೆಯಲಾಗವುದೆಂದರು.
ನಗರಸಭೆಯ ಗೊಂದಲದ ಕುರಿತು ಮಾತನಾಡಿದ ಟಿ.ಪಿ.ರಮೇಶ್, ನಗರಸಭಾ ಕಾಂಗ್ರೆಸ್ ಸದಸ್ಯರ ಸಭೆ ಕರೆದು ಪಕ್ಷದಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ದೂರ ಮಾಡಲು ಪ್ರಯತ್ನಿಸುವುದಾಗಿ ಹೇಳಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಪುಷ್ಪಾವತಿ ಮಾತನಾಡಿ, ನಗರ ಸಭೆಯಲ್ಲಿ ಬಿಜೆಪಿ ಸದಸ್ಯರು ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ವಿರುದ್ಧ ಗೂಂಡಾವರ್ತನೆ ತೋರಿದ್ದಾರೆಂದು ಆರೋಪಿಸಿದರು. ಜಿಲ್ಲೆಯ ವಿವಿಧೆಡೆ ಮಹಿಳಾ ದಿನದ ಆಚರಣೆಯ ಸಂದರ್ಭವೇ ಒಬ್ಬ ಮಹಿಳಾ ಅಧ್ಯಕ್ಷರನ್ನು ಅವಮಾನಿಸಲಾಗಿದೆ. ಬಿಜೆಪಿ ತನ್ನ ವರ್ತನೆ ಬದಲಾಯಿಸಿಕೊಳ್ಳದಿದ್ದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪುಷ್ಪಲತಾ ತಿಳಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನ ಮಾತನಾಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನು ಟೀಕಿಸಿರುವ ಬಿಜೆಪಿಯ ಅಭಿಮನ್ಯುಕುಮಾರ್ ಅವರ ವರ್ತನೆ ಖಂಡನೀಯವೆಂದರು. ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರಿವಿಲ್ಲದ ಅಭಿಮನ್ಯುಕುಮಾರ್ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆಂದು ಮೈನ ಟೀಕಿಸಿದರು.
ಜಿಲ್ಲಾ ಕಾರ್ಯದರ್ಶಿ ಬಿ.ಎನ್. ಪ್ರಕಾಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಭಿವೃದ್ಧಿಯ ಪರವಾಗಿದೆ. ಆದರೆ, ಗೋಣಿಕೊಪ್ಪಲಿನಲ್ಲಿ ನಡೆಸಿರುವ ಏಕಪಕ್ಷೀಯ ಕ್ರಮಗಳನ್ನು ಸಹಿಸಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದರು. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ಹಾಗೂ ನಗರಾಧ್ಯಕ್ಷರಾದ ಕೆ.ಯು. ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.
ಫೋಟೋ :: ಕಾಂಗ್ರೆಸ್
===========================================