ಗುಂಡ್ಲುಪೇಟೆ: ಪೊಲೀಸ್ ಠಾಣೆಯಲ್ಲಿಯೇ ವಿಷ ಸೇವಿಸಿದ ರೈತನೊಬ್ಬ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತಾಲೂಕಿನ ತೆರಕಣಾಂಬಿಯಲ್ಲಿ ನಡೆದಿದೆ.
ತಾಲೂಕಿನ ಕಗ್ಗಳದ ಹುಂಡಿ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಚೀನಾ ಮೂಲದ ಚೆಂಡುಮಲ್ಲಿಗೆ ಸಂಸ್ಕರಣಾ ಘಟಕದ ಮಾಲೀಕರು ಸಮೀಪದ ಜಮೀನಿನ ನಾಗೇಶ್(30) ಎಂಬ ರೈತರ ವಿರುದ್ದ ದೂರು ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸುವ ಸಲುವಾಗಿ ಪೊಲೀಸರು ನಾಗೇಶ್ ಗೆ ನೊಟೀಸ್ ನೀಡಿದ್ದರೂ ಆತ ಹಾಜರಾಗಿರಲಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಆತನ ಜಮೀನಿಗೆ ತೆರಳಿದ ಪೊಲೀಸರು ಠಾಣೆಗೆ ಕರೆ ತಂದಿದ್ದಾರೆ. ಈ ಸಂದರ್ಭದಲ್ಲಿ ನಾಗೇಶ್ ವಿಷ ಸೇವಿಸಿ ಕುಸಿದುಬಿದ್ದಿದ್ದಾನೆ. ಕೂಡಲೇ ಆತನನ್ನು ಗ್ರಾಮದ ಪ್ರಾಥಮಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೊಯ್ಯಲಾಗಿದೆ