ಮಡಿಕೇರಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ಮುಖಂಡರು ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಮುಂಖಂಡರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಇರುವುದಿಲ್ಲ, ಅದೇ ದಿನ ಈದ್ ಮಿಲಾದ್ ಹಬ್ಬವಿದೆ. ಅಯೋಧ್ಯೆ ತೀರ್ಪು ಇದೇ ತಿಂಗಳ 17ರೊಳಗೆ ಪ್ರಕಟವಾಗಬಹುದು, ಆದ್ದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿವಿಧ ಧಾರ್ಮಿಕ ಮುಖಂಡ ಸಹಕಾರ ಅತ್ಯಗತ್ಯವಾಗಿದೆ ಎಂದು ಮನವಿ ಮಾಡಿದರು.
ಬಳಿಕ ವಕ್ಫ್ ಮಂಡಳಿ ಅಧ್ಯಕ್ಷರಾದ ಕೆ.ಎ.ಯಾಕುಬ್ ಅವರು ಮಾತನಾಡಿ ಟಿಪ್ಪು ಜಯಂತಿಯನ್ನು ಕಳೆದ ಮೂರು ವರ್ಷಗಳಿಂದ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿತ್ತು, ಈ ಬಾರಿ ಸರ್ಕಾರ ಹಿಂದೆ ಸರಿದಿರುವುದರಿಂದ ಟಿಪ್ಪು ಜಯಂತಿ ಆಚರಣೆ ಮಾಡುತ್ತಿಲ್ಲ, ಈದ್ ಮಿಲಾದ್ ಹಬ್ಬವನ್ನು ಮಸೀದಿಯಲ್ಲಿ ಆಚರಿಸಲಾಗುತ್ತದೆ. ಆದರೆ ಸಂಘಟನೆಗಳಿಂದ ನಡೆಯುವುದಿಲ್ಲ, ಇನ್ನೂ ಬಾಬರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರದ ಕಾನೂನನ್ನು ಗೌರಿಸುತ್ತೇವೆ. ಸಂವಿಧಾನ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದರು.
ಕೊಂಡಂಗೇರಿ ಮುಸ್ಲಿಂ ಜಮಾಯತ್ ಸಮಿತಿ ಕಾರ್ಯದರ್ಶಿ ಯೂಸಫ್ ಅವರು ಮಾತನಾಡಿ 1400 ವರ್ಷಗಳಿಂದ ಈದ್ ಮಿಲಾದ್ ಹಬ್ಬವನ್ನು ಮುಸಲ್ಮಾನ ಬಾಂಧವರು, ಜಮಾಯತ್ ನವರು ವಿಜೃಂಭಣೆಯಿಂದ, ಶಾಂತಿಯುತವಾಗಿ ಆಚರಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ ಅವರು ಮಾತನಾಡಿ, ಈದ್ ಮಿಲಾದ್ ಹಬ್ಬ ಆಚರಣೆ ಸಂಬಂಧ ಇದುವರೆಗೆ ಶಾಂತಿ ಸಭೆ ನಡೆಸಿಲ್ಲ, ಇದರ ಅಗತ್ಯತೆಯೂ ಇಲ್ಲ, ಆದರೆ ಕಳೆದ 2016ರಲ್ಲಿ ಟಿಪ್ಪು ಜಯಂತಿ ಆಚರಣೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಕಲಹ ಉಂಟಾಗಿತ್ತು, ಆದ್ದರಿಂದ ಸರ್ಕಾರ ಈ ಬಾರಿ ಟಿಪ್ಪು ಜಯಂತಿ ಆಚರಣೆ ಇಲ್ಲವೆಂದು ಆದೇಶ ಹೊರಡಿಸಿದೆ. ಹಾಗೆಯೇ ಅಯೋಧ್ಯೆ ವಿಚಾರ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುವುದು ಎಂದು ಅವರು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹ್ಯಾರೀಸ್ ಅವರು ಮಾತನಾಡಿ ಟಿಪ್ಪು ಜಯಂತಿ ಆಚರಣೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ, ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುತ್ತೇವೆ. ಅಯೋಧ್ಯೆ ಸಂಬಂಧ ನ್ಯಾಯಾಲಯದ ತೀರ್ಪು ಗೌರವಿಸುತ್ತೇವೆ ಎಂದರು.
ಭಾಗಮಂಡಲ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಮೈಕ್ ಬಳಕೆಗೆ ಅವಕಾಶ ನೀಡಲಾಗಿದೆ. ಆದರೆ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಹ್ಯಾರೀಸ್ ಅವರು ಮನವಿ ಮಾಡಿದರು.
ಪಿಎಫ್ಐ ಜಿಲ್ಲಾಧ್ಯಕ್ಷರಾದ ಹ್ಯಾರೀಸ್ ಅವರು ಅಯೋಧ್ಯ ವಿಚಾರ ನ್ಯಾಯಾಲಯದ ತೀರ್ಪು ಗೌರವಿಸಲಾಗುವುದು ಎಂದರು.
ವಿವಿಧ ಧಾರ್ಮಿಕ ಮುಖಂಡರ ಅಭಿಪ್ರಾಯ ಪಡೆದ ಬಳಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪಿ.ಸುಮನ್ ಅವರು ಟಿಪ್ಪು ಜಯಂತಿಯನ್ನು ಖಾಸಗಿ ಆಚರಿಸುವಂತಿಲ್ಲ ಎಂದು ಅವರು ಹೇಳಿದರು.
ವಿವಿಧ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಅಂಶಗಳು ಹರಿದಾಡುವುದು ತಿಳಿದುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು. ಹಬ್ಬಗಳನ್ನು ಶಾಂತಿಯುವಾಗಿ ಆಚರಿಸಬೇಕು ಎಂದು ಅವರು ಮನವಿ ಮಾಡಿದರು.
ಅಯೋಧ್ಯೆ ತೀರ್ಪು ಸಂದರ್ಭದಲ್ಲಿ ವಿಜಯೋತ್ಸವಕ್ಕೆ ಅವಕಾಶವಿಲ್ಲ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ, ಶಾಂತಿ ಸುವ್ಯವಸ್ಥೆಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಕೋರಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತ ಜೊತೆ ಎಲ್ಲಾ ಧಾರ್ಮಿಕ ಸಮಾಜಗಳು ಸಹಕಾರ ನೀಡಿದ್ದೀರಿ, ಅದೇ ಸಹಕಾರವನ್ನು ಮುಂದುವರೆಸಬೇಕು. ಧಾರ್ಮಿಕ ಮುಖಂಡರು ಸಭೆಯ ಭರವಸೆಯನ್ನು ಎಲ್ಲಾ ಕಡೆ ತಿಳಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ. ಆ ನಿಟ್ಟಿಲ್ಲಿ ತಮ್ಮ ಸಹಕಾರ ಅತ್ಯಗತ್ಯ ಎಂದರು.
ಈ ಬಾರಿ ಟಿಪ್ಪು ಜಯಂತಿ ಇರುವುದಿಲ್ಲ, ಖಾಸಗಿ ಕಾರ್ಯಕ್ರಮಕ್ಕೂ ಅವಕಾಶವಿಲ್ಲ, ಸರ್ಕಾರದ ಆದೇಶವನ್ನು ಪಾಲಿಸಬೇಕು. ಅಯೋಧ್ಯ ತೀರ್ಪು ಸಂಬಂಧ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಬೇಕು. ಇನ್ನೊಬ್ಬರಿಗೆ ನೋವು ಉಂಟು ಮಾಡಬಾರದು. ನಿಯಮಗಳನ್ನು ಅನುಸರಿಸಬೇಕು. ಸಾಮಾಜಿಕ ಜಾಲತಾಣಗಳ ಮಾಹಿತಿಗಳನ್ನು ಫಾರ್ವರ್ಡ್ ಮಾಡಬಾರದು, ಜಿಲ್ಲೆಯಲ್ಲಿ ಶಾಂತಿಯಿಂದ ಹಬ್ಬ ಆಚರಿಸಬೇಕು. ಗೊಂದಲ ನಿರ್ಮಾಣ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಎಲ್ಲಾ ಧರ್ಮವನ್ನು ಗೌರವಿಸಬೇಕು. ಪ್ರವಾದಿಯವರ ಸಂದೇಶಗಳನ್ನು ಪಾಲಿಸಬೇಕು. ಯಾರಿಗೂ ನೋವುಂಟು ಮಾಡಬಾರದು, ಶಾಂತಿ, ಸಹಭಾಳ್ವೆ, ಸಹೋದರತ್ವ ಪ್ರವಾದಿಯವರ ಸಂದೇಶವಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಡಿವೈಎಸ್ಪಿಗಳಾದ ದಿನೇಶ್ ಕುಮಾರ್, ಮುರಳಿಧರ, ಜಯಕುಮಾರ್, ವಿವಿಧ ಧಾರ್ಮಿಕ ಮುಖಂಡರು, ನಾನಾ ಇಲಾಖೆ ಅಧಿಕಾರಿಗಳು ಇತರರು ಹಾಜರಿದ್ದರು.