ಹಾಸನ: ಜೆಡಿಎಸ್ ಪಕ್ಷವು ಬಿಜೆಪಿಯಲ್ಲಿ ಯಾವುದೇ ಕಾರಣಕ್ಕೂ ವಿಲೀನಗೊಳ್ಳಲು ಸಾಧ್ಯವಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿಯೇ ಈ ರೀತಿ ಅಪ್ರಪಚಾರ ಮಾಡಲಾಗುತ್ತಿದೆ. ಈರೀತಿಯ ಸುಳ್ಳು ಸುದ್ದಿ ಹರಡಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಅವರು ಜನರ ಕ್ಷಮೆಯಾಚಿಸಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿ ಸಾರವಿಲ್ಲದ ಹೇಳಿಕೆ ನೀಡುವುದು ಅವರಿಗೂ ಶೋಭೆ ತರುವುದಿಲ್ಲ. ಈಗಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಮಾತನಾಡಿದ್ದೇನೆ. ಇನ್ನು ಬಿಜೆಪಿ ಅಥವಾ ಕಾಂಗ್ರೆಸ್ ಜತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ. ಒಂದು ವೇಳೆ ಅಂತಹ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆಯೇ ಹೊರತು ಅದರೊಂದಿಗೆ ಸೇರುವುದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಸ್ವಂತ ಬಲದಿಂದ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಹೇಳಿದರು.