ಹುಬ್ಬಳ್ಳಿ : ಪತಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡು ಮೂರು ದಿನವಾದರೂ ಪತ್ನಿ ಯಾರಿಗೂ ಮಾಹಿತಿ ನೀಡದ ವಿಚಿತ್ರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಂಜುನಾಥ್ ಅಬ್ಬಿಗೇರಿ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಮಂಜುನಾಥ್ ಧಾರವಾಡ ತಾಲೂಕಿನ ಎತ್ತಿನಗುಡ್ಡದ ನಿವಾಸಿಯಾಹಿದ್ದರು.
ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಮಂಜುನಾಥ್, ಪತ್ನಿ ಮತ್ತು ಮಕ್ಕಳೊಂದಿಗೆ ಹುಬ್ಬಳ್ಳಿಯ ನವನಗರದ ಎಲ್ಐಜಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮಂಜುನಾಥ್ ಗೆ ಇಬ್ಬರು ಮಕ್ಕಳಿದ್ದಾರೆ. ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡು ಮೂರು ದಿನವಾದರೂ ಪತ್ನಿ ಈ ವಿಷಯವನ್ನು ಯಾರಿಗೂ ತಿಳಿಸಿಲ್ಲ. ಪತ್ನಿ ಮೃತನ ಕುಟುಂಬಸ್ಥರಿಗೂ ವಿಷಯ ಹೇಳಿರಲಿಲ್ಲ.
ಇಂದು ಬೆಳಗ್ಗೆ ಮನೆಯಿಂದ ಶವದ ಕೊಳೆತು ವಾಸನೆ ಬಂದ ಹಿನ್ನೆಲೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಶವವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಕಿಮ್ಸ್ ಗೆ ಕಳುಹಿಸಲಾಗಿದೆ. ಆದ್ರೆ ಪತ್ನಿ ಯಾಕೆ ಈ ವಿಷಯ ಹೇಳಲಿಲ್ಲ ಎಂಬುದರ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
ಮೃತ ಮಂಜುನಾಥ್ ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಥಳೀಯರು ಮತ್ತು ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.