ಬೆಂಗಳೂರು : ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಣಾ ಕಾರ್ಯಕ್ರಮದಲ್ಲಿ ಕನ್ನಡ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್ ಜಾರಿ ಮಾಡಿದೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಮಾಡಬೇಕು ಎಂಬ ಆದೇಶವಿದ್ದರೂ ಮೆಟ್ರೋ ರೈಲು ವಿಸ್ತರಣೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಬಳಕೆ ಮಾಡದೆ ಅಪಮಾನ ಮಾಡಿದ್ದು, ಇದಕ್ಕೆ ಕಾರಣವೇನು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ಕುಮಾರ್ ಪ್ರಶ್ನಿಸಿದ್ದಾರೆ.
ಬ್ಯಾನರ್ ಗಳಲ್ಲಿ ಕನ್ನಡ ಭಾಷೆ ಬಳಸಬೇಕೆಂದು ಸರ್ಕಾರ ಸೂಚನೆ ನೀಡಿದೆ. ಆದರೂ ಕಾರ್ಯಕ್ರಮದ ಸಂದರ್ಭ ಕನ್ನಡ ಭಾಷೆಯನ್ನು ನಿರ್ಲಕ್ಷಿಸುವ ಮೂಲಕ ಕನ್ನಡಿಗರ ಭಾವನೆಗಳಿಗೆ ಅಪಮಾನ ಮಾಡಲಾಗಿದೆ. ಇದಕ್ಕೆ ಕಾರಣವೇನು ಎಂಬುವುದನ್ನು ನೋಟೀಸ್ನಲ್ಲಿ ತಿಳಿಸಬೇಕೆಂದು ಸೂಚಿಸಿದ್ದಾರೆ. ಮುಂದೆ ಈ ರೀತಿ ಪ್ರಮಾದ ಎಸಗುವವರ ಮೇಲೆ ಕಠಿಣ ಕ್ರಮ ಜರಗಿಸುವುದಾಗಿ ಎಚ್ಚರಿಸಿದ್ದಾರೆ.