ಬೆಂಗಳೂರು,ನ.4 : ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಈ ಹಬ್ಬದಂದು ಗೋಪೂಜೆ ಮಾಡಲು ಆದೇಶಿಸಲಾಗಿದೆ.
ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನವೆಂಬರ್ 5ರ ಬಲಿಪಾಡ್ಯಮಿಯಂದು ಸಂಜೆ 5.30ರಿಂದ 6.30ರ ಸಮಯದಲ್ಲಿ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗೋ ಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಪೂಜೆ ಮಾಡಿ, ತಿಂಡಿತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ನಡೆದು ಬಂದಿದೆ.
ಮಹಾಭಾರತದ ಕಾಲಘಟ್ಟದಲ್ಲಿ ಕಾರ್ತಿಕ ಶುದ್ಧ ಪಾಡ್ಯದ ದಿನದಂದು ಶ್ರೀ ಕೃಷ್ಣ ಗೋವರ್ಧನ ಗಿರಿಯನ್ನು ಎತ್ತಿ ಹಿಡಿದು ಗೋಪಾಲಕರಿಗೆ ರಕ್ಷಣೆ ನೀಡಿದ ಎಂಬ ಪ್ರತೀತಿಯೂ ಇದೆ.
ಈ ದಿನದಂದು ಗೋವರ್ಧನ, ಗೋ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ಕೃಷ್ಣ, ಗೋಪ-ಗೋಪಿಯರ, ಇಂದ್ರ, ಹಸುಗಳ, ಕರುಗಳ ಚಿತ್ರಗಳನ್ನು ಜೋಡಿಸಿ ಮೆರವಣಿಗೆ ಮಾಡುತ್ತಾರೆ. ಗೋಪೂಜೆಯನ್ನು ಬಲಿಪಾಡ್ಯಮಿ ದಿನದಂದು ಆಚರಣೆ ಮಾಡಲಾಗುತ್ತದೆ.
ಬಲಿಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು. ಅದಕ್ಕೆ ಪೂಜೆಗಳನ್ನು, ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋವುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.
ಇನ್ನು ಹೆಚ್ಚಿನ ಕಡೆಗಳಲ್ಲಿ ಆ ದಿನದಂದು ಹಸುವಿನ ಹಾಲನ್ನೂ ಕರೆಯಬಾರದೆಂಬ ಪ್ರತೀತಿ ಇದೆ. ಕರುಗಳು ಬೇಕಾದಷ್ಟು ಹಾಲು ಕುಡಿದು ಸಂತೋಷವಾಗಿರಬೇಕೆಂಬುದು ಇದರ ಉದ್ದೇಶ.