ಬೆಂಗಳೂರು: ಬೇಲೂರು ತಾಲ್ಲೂಕಿನಲ್ಲಿ ನಡೆದಿದ್ದ ಮಂಗಗಳ ಸಾವಿನ ಬಗ್ಗೆ ಹೈಕೋರ್ಟ್ ಶುಕ್ರವಾರ ಸ್ವಯಂ ಪ್ರೇರಿತ ಸಾರ್ವಜನಿಕ ಅರ್ಜಿ ದಾಖಲಿಸಿಕೊಂಡಿದೆ. ಮಂಗಗಳ ಹತ್ಯೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿ ಕಳವಳಗೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
ಮಾಧ್ಯಮಗಳ ವರದಿ ಪ್ರಕಾರ, ಮಂಗಗಳನ್ನು ಹತ್ಯೆ ಮಾಡಿ ಚೀಲದಲ್ಲಿ ತುಂಬಿ ಬಿಸಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶಗಳ ಆಧಾರದಲ್ಲಿ ಈ ಪ್ರಕರಣದ ವಿಚಾರಣೆ ಅಗತ್ಯವಿದೆ. ಈ ಘಟನೆಯು ಪ್ರಾಣಿಗಳ ಬದುಕುವ ಹಕ್ಕನ್ನು ಕಸಿದುಕೊಂಡಿದೆ ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.
ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಹಾಸನದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಹಾಸನ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪ್ರಾಣಿ ಕಲ್ಯಾಣ ಮಂಡಳಿಯನ್ನು ಪ್ರತಿವಾದಿಗಳಾಗಿಸಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪೀಠ ನಿರ್ದೇಶನ ನೀಡಿತು.
ಬೇಲೂರು ತಾಲ್ಲೂಕಿನ ಚೌಡನಹಳ್ಳಿ ರಸ್ತೆ ಬದಿಯಲ್ಲಿ ಬುಧವಾರ ರಾತ್ರಿ ಬಿಸಾಡಿದ್ದ ಚೀಲದಲ್ಲಿ 38 ಮೃತಪಟ್ಟ ಮಂಗಗಳು ಕಂಡುಬಂದಿದ್ದವು.