ಬೆಂಗಳೂರು: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೊ ಅದರಂತೆ ನಡೆದುಕೊಳ್ಳುತ್ತೇನೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಸಚಿವ ಸ್ಥಾನ ಬಿಡುತ್ತೇನೆ ಸಚಿವ ಸಿ.ಟಿ. ರವಿ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರದಂತೆ ಪಕ್ಷ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ. ರವಿ ಪ್ರತಿಕ್ರಿಯಿಸಿದರು.
ಚುನಾವಣೆಗೆ ಸ್ಪರ್ಧಿಸಲು ಪಕ್ಷದ ವರಿಷ್ಠರು ಸೂಚಿಸಿದಾಗ ಮರು ಮಾತನಾಡದೆ ಸ್ಪರ್ಧಿಸಿ, ಗೆದ್ದು ಬಂದಿದ್ದೇನೆ. ಎಂದಿಗೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲಿಲ್ಲ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವಂತೆಯೂ ಕೇಳಿರಲಿಲ್ಲ. ವರಿಷ್ಠರು ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಮುಂದಿನ ಗುರಿ ಎಂದು ಹೇಳಿದರು.
ವರಿಷ್ಠರು ಸೂಚಿಸಿದ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ. ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋದರೂ ಕರ್ನಾಟಕವೇ ನನ್ನ ರಾಜಕೀಯ ಕರ್ಮಭೂಮಿ ಎಂದು ಹೇಳಿದರು.