ಬೆಂಗಳೂರು: ಸತತ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದ್ದು, ಸಿಲಿಕಾನ್ ಸಿಟಿಯ ಬಹುತೇಕ ಪ್ರದೇಶಗಳು ನಲುಗಿ ಹೋಗಿವೆ. ಎಲ್ಲೆಂದರಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನ ಕೆಂಗೇರಿ, ಬಾಪೂಜಿನಗರ, ಬಿಳೇಕಹಳ್ಳಿ, ಶಿವಾಜಿನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮೈಸೂರು ರಸ್ತೆಯಿಂದ ಸಿಟಿ ಮಾರುಕಟ್ಟೆ ಸಂಪರ್ಕಿಸುವ ಶ್ರೀ ಬಾಲಗಂಗಾಧರನಾಥ ಸ್ವಾಮಿ ಮೇಲ್ಸೇತುವೆ ಸೇರಿದಂತೆ ಪ್ರಮುಖ ಪ್ರದೇಶಗಳ ರಸ್ತೆಗಳಲ್ಲಿ 2 ರಿಂದ 3 ಅಡಿಗಳಷ್ಟು ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು. ಇನ್ನು ನಾಯಂಡಹಳ್ಳಿ ಸಮೀಪ ರಸ್ತೆ ಮಧ್ಯೆ ನೀರಿನಲ್ಲಿ ಕಾರೊಂದು ಕೆಟ್ಟು ನಿಂತ ಪರಿಣಾಮ ಬೆಳ್ಳಂಬೆಳಗ್ಗೆಯೇ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಮಳೆ ನಡುವೆಯೇ ವಾಹನ ಸವಾರರು ಪರದಾಡುವಂತಾಗಿತ್ತು.
ಭಾರೀ ಮಳೆಯಿಂದಾಗಿ ಕೋಡಿಚಿಕ್ಕನಹಳ್ಳಿ ರಸ್ತೆ ಕೆರೆಯಂತಾಗಿದೆ. ಇದರಿಂದಾಗಿ 10ಕ್ಕೂ ಹೆಚ್ಚು ಅಪಾರ್ಟ್ ಮೆಂಟ್ ಗಳ ಬೇಸ್ ಮೆಂಟ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿ ವಿವರಿಸಿದೆ. ಈ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೋಟ್ ಮೂಲಕ ಗರ್ಭಿಣಿಯೊಬ್ಬರನ್ನು ರಕ್ಷಿಸಲಾಗಿದೆ.
ಮಡಿವಾಳ ಕೆರೆ ತುಂಬಿ ರಸ್ತೆಗೆ ಹರಿದು ಬಂದ ಪರಿಣಾಮ ಜನರು ಬಿಟಿಎಂ ಲೇಔಟ್ ನಲ್ಲಿ ಮೀನು ಹಿಡಿಯಲು ಮುಗಿಬಿದ್ದಿರುವ ಘಟನೆ ವರದಿಯಾಗಿದೆ. ಕೋಡಿಚಿಕ್ಕನಹಳ್ಳಿಯಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಈಗಾಗಲೇ ರಕ್ಷಣಾ ಕಾರ್ಯ ಆರಂಭಿಸಿದ್ದು, ಬೋಟ್ ಮೂಲಕ ಸ್ಥಳೀಯ ನಿವಾಸಿಗಳಿಗೆ ಆಹಾರ, ನೀರು, ಅಗತ್ಯ ಔಷಧಿಗಳನ್ನು ಒದಗಿಸುತ್ತಿದ್ದಾರೆ.