ಬೆಂಗಳೂರು : ವಿಧಾನಮಂಡಲ ಅಧಿವೇಶನದಲ್ಲಿ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಿತು.
ರಾಜ್ಯದ ಪ್ರಗತಿಗೆ ಸಂಬಂಧಿಸಿದ ವಿಚಾರಗಳು, ಸಿದ್ದರಾಮಯ್ಯ ಸರ್ಕಾರದ ಕಾಲದಲ್ಲಿ ಆಗಿರುವ ಭ್ರಷ್ಟಾಚಾರ ಹಾಗೂ ಕಳಂಕಿತ ಅಧಿಕಾರಿಗಳ ರಕ್ಷಣೆ ಬಗ್ಗೆ ಪ್ರಸ್ತಾಪ ಮಾಡಲಾಗುವುದು. ನನ್ನದು ಕಳಂಕರಹಿತ ಸರಕಾರ, ಕ್ಲೀನ್ ಸರಕಾರ ಎಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರ ಅಸಲಿ ಬಣ್ಣವನ್ನು ಬಯಲು ಮಾಡುವ ಬಗ್ಗೆ ಶಾಸಕಾಂಗ ಸಭೆಯಲ್ಲಿ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದರು.
ಅಲ್ಲದೆ, ಕೈಗಾರಿಕೆ, ಬಂಡವಾಳ ಹೂಡಿಕೆ ಹಾಗೂ ಪ್ರವಾಸೋಧ್ಯಮ ಇತ್ಯಾದಿ ಕ್ಷೇತ್ರಗಳಲ್ಲಿ ಸಾಕಷ್ಟು ಗೊಂದಲ, ಅವ್ಯವಹಾರಕ್ಕೆ ಕಾರಣವಾದ ಐದು ವರ್ಷಗಳ ಕಾಂಗ್ರೆಸ್ ಸರಕಾರದ ಹಗರಣಗಳನ್ನು ಸದನದಲ್ಲಿ ತೆರೆದಿಡಲು ನಿರ್ಧರಿಸಲಾಗಿದೆ ಎಂದ ಅವರು, ಈ ಬಗ್ಗೆ ನಮ್ಮ ಶಾಸಕರ ಜತೆ ಚರ್ಚೆ ನಡೆಸಲಾಯಿತು ಎಂದರು.
ರಾಜ್ಯದ ಹಿತದ ಬಗ್ಗೆ ಮಾತ್ರ ಚರ್ಚೆ:
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜ್ಯದ ಹಿತವನ್ನು ಕಡೆಗಣಿಸಿ ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಿದ್ದು ಸಮಾಜದ ಶಾಂತಿಯನ್ನು ಕೆಡಿಸುತ್ತಿದ್ದರೆ, ಜೆಡಿಎಸ್ ಪಕ್ಷವು ಜನರು ಎದುರಿಸುತ್ತಿರುವ ಸಮಸ್ಯೆಗಳು, ಸರಕಾರದ ವೈಫಲ್ಯಗಳ ಬಗ್ಗೆ ಕಲಾಪದಲ್ಲಿ ಮಾತನಾಡಲಿದೆ. ಅಲ್ಲದೆ, ಸರಕಾರದ ಕೋವಿಡ್ ವೈಫಲ್ಯ, ನಿರುದ್ಯೋಗ, ಬೆಲೆ ಏರಿಕೆ ಇತ್ಯಾದಿ ವಿಷಯಗಳ ಬಗ್ಗೆ ಪಕ್ಷವೂ ದೊಡ್ಡ ಮಟ್ಟದಲ್ಲಿ ದನಿ ಎತ್ತಲಿದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ರಾಜ್ಯಪಾಲರ ಭಾಷಣದ ಮೇಲೆ ನಡೆಸಬೇಕಾದ ಚರ್ಚೆಯ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಯಿತು. ರಾಜ್ಯದ ಪ್ರಗತಿಯ ಮುನ್ನೋಟ ಇಲ್ಲದೆ ಕೇವಲ ಕೋವಿಡ್ ವರದಿಯಷ್ಟೇ ಆಗಿದ್ದ ರಾಜ್ಯಪಾಲರ ಭಾಷಣದ ಮೇಲೆ ಹೆಚ್ಚು ಒತ್ತು ಕೊಟ್ಟು ಚರ್ಚೆ ನಡೆಸಲು ಶಾಸಕಾಂಗ ಸಭೆಯಲ್ಲಿ ತೀರ್ಮಾನ ಮಾಡಲಾಯಿತು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಹಿಜಾಬ್ ವಿಚಾರ:
ಹಿಜಾಬ್ ವಿಷಯವನ್ನು ಇಟ್ಟುಕೊಂಡು ರಾಷ್ಟ್ರೀಯ ಪಕ್ಷಗಳು ನಡೆಸುತ್ತಿರುವ ಸಮಾಜದ ಶಾಂತಿ ಕದಡುವ ರಾಜಕೀಯವನ್ನು ಜನರ ಮುಂದೆ ಇಡಲು ಶಾಸಕಾಂಗ ಪಕ್ಷ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
ಸೂಕ್ಷ್ಮ ವಿಚಾರಗಳನ್ನು ಶಿಕ್ಷಣದಲ್ಲಿ ತರುವ ಮೂಲಕ ಇಡೀ ಶಿಕ್ಷಣ ವ್ಯವಸ್ತೆಯನ್ನು ಹಾಳು ಮಾಡುವುದು ಹಾಗೂ ಚುನಾವಣೆಯಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ನಡೆಸಿವೆ. ಈ ಬಗ್ಗೆ ಸದನದಲ್ಲಿ ಪಕ್ಷ ವಹಿಸಬೇಕಾದ ನಿಲುವಿನ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಷೆಂಪೂರ್, ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಹಾಜರಿದ್ದರು.