ಬೆಂಗಳೂರು: ದಕ್ಷಿಣ ಭಾರತದಲ್ಲಿ ಮತ್ತೊಂದು ಚಂಡಮಾರುತದ ಭೀತಿ ಆರಂಭವಾಗಿದ್ದು, ಡಿಸೆಂಬರ್ ನಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿವಾರ್ ಸೃಷ್ಟಿಸಿದ್ದ ಅವಾಂತರದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಅದಾಗಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಬೆಂಗಳೂರಿನಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಮಾತ್ರವಲ್ಲದೇ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇದೇ ವಾರಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಬಂಗಾಳಕೊಲ್ಲಿ ಸೃಷ್ಟಿಯಾಗತ್ತಿರುವ ಚಂಡಮಾರುತ ವಾಯುವ್ಯ ದಿಕ್ಕಿನಲ್ಲಿ ಸಂಚರಿಸಲಿದ್ದು, ದಕ್ಷಿಣ ಭಾರತದ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ. ಡಿಸೆಂಬರ್ 3-4ರ ವೇಳೆಗೆ ಈ ಚಂಡಮಾರುತ ದಕ್ಷಿಣ ಭಾರತದತ್ತ ಧಾವಿಸಲಿದ್ದು, ಈ ವೇಳೆ ದಕ್ಷಿಣ ಕರ್ನಾಟಕದ ಒಳ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ.