ಬೆಂಗಳೂರು: ನಟನೆಗೆ ಅವಕಾಶಗಳನ್ನು ಕಲ್ಪಿಸಿಕೊಡುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಬೆಂಗಳೂರಿನ ಪ್ಯಾಲೇಸ್ ಗುಟ್ಟಳ್ಳಿ ನಿವಾಸಿ ಆನಂದ್, ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಧಾರವಾಹಿಗಳಲ್ಲಿ ಅಭಿನಯಿಸಲು ಅವಕಾಶ ಕೊಡಿಸುವುದಾಗಿ ನಂಬಿಸಿ ಆಕೆಯನ್ನು ಲಾರ್ಡ್ ನಲ್ಲಿ ಇರಿಸಿ ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಳು. ಆಕೆಯ ಹೇಳಿಕೆಯ ಮೇಲೆ ಆರೋಪಿಯನ್ನು ಬಂಧಿಸಲಾಗಿತ್ತು.
2020 ರ ಮಾರ್ಚ್ 6 ರಂದು ಹಾಸನ ಪೊಲೀಸರಿಗೆ ಅಪ್ರಾಪ್ತೆ ನಾಪತ್ತೆಯಾದ ಬಗ್ಗೆ ತಾಯಿ ಹಾಸನ ಪೊಲೀಸರು ದೂರು ನೀಡಿದ್ದು, ಮಾರ್ಚ್ 10 ರಂದು ಆಕೆಯನ್ನು ಪತ್ತೆ ಮಾಡಿದ್ದ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಅನಂತರ ಸಂತ್ರಸ್ತೆ ನಡೆದ ಘಟನೆಗಳನ್ನು ತಿಳಿಸಿದ್ದು, ಆರೋಪಿಯನ್ನು ಪೊಲೀಸರು ತಕ್ಷಣವೇ ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿದ್ದರು.
ಅನಂತರ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. ನ್ಯಾಯಾಲಯ ಸಂತ್ರಸ್ತೆಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಗ್ಧ ಅಪ್ರಾಪ್ತೆಯನ್ನು ದಾರಿ ತಪ್ಪಿಸುವ ಉದ್ದೇಶದಿಂದ ಆರೋಪಿ ಕೃತ್ಯವೆಸಗಿದ್ದು, ಜಾಮೀನು ನೀಡಲು ಯಾವುದೇ ಸಕಾರಣವಿಲ್ಲ ಎಂದು ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.