ಬೆಂಗಳೂರು: ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಸಿ. ಓಲೇಕಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ನೀಡಿದ್ದಾರೆ.
ಬಿಜೆಪಿ ಮುಖಂಡ ಸಂತೋಷ್ ರೆಡ್ಡಿ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ನೆಹರೂ ಓಲೆಕಾರ್ ವಿರುದ್ದ ಶಿಕ್ಷೆ ಪ್ರಕಟವಾಗಿದೆ. ಭ್ರಷ್ಟಾಚಾರ ಕೇಸ್ನಲ್ಲಿ ನ್ಯಾಯಾಲಯ ತೀರ್ಪು ನೀಡಿದ್ದರೂ ಯಾವುದೇ ಕ್ರಮವಾಗಿಲ್ಲ. ನೆಹರು ಓಲೆಕಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ. 2013ರಲ್ಲಿ ಹಾವೇರಿಯ ಶಶಿಧರ್ ಹಳ್ಳಿಕೇರಿ ಅವರು ದೂರು ದಾಖಲಿಸಿ, 2008 ಮತ್ತು 2013ರ ಅವಧಿಯಲ್ಲಿ ಶಾಸಕರಾಗಿದ್ದ ಓಲೇಕಾರ್ ಅವರು ಸರ್ಕಾರದ ಸಿವಿಲ್ ಕೆಲಸಗಳನ್ನು ಬೇರೆಯವರಿಗೆ ದಕ್ಕದಂತೆ ತಮ್ಮ ಇಬ್ಬರು ಪುತ್ರರಿಗೆ ಕೊಡಿಸಿದ್ದರು ಎಂದು ಆರೋಪಿಸಿದ್ದರು.
ಈ ಖಾಸಗಿ ದೂರನ್ನು ಆಧರಿಸಿ ಹಾವೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿತ್ತು. ಇದರ ಅನ್ವಯ ಐಪಿಸಿ ಸೆಕ್ಷನ್ಗಳಾದ 197, 198, 409 ಮತ್ತು 420 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 13(1)(ಡಿ) ಜೊತೆಗೆ 13(2) ಅಡಿ ಪ್ರಕರಣ ದಾಖಲಿಸಿ, ಲೋಕಾಯುಕ್ತ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆಯ ಜೊತೆಗೆ ಶಾಸಕ ಓಲೇಕಾರ್ಗೆ ₹2,000 ದಂಡ ವಿಧಿಸಿದ್ದು, ಅವರ ಇಬ್ಬರು ಪುತ್ರರಿಗೆ ತಲಾ 6,000 ಹಾಗೂ 4,5,7,8 ಮತ್ತು 9ನೇ ಆರೋಪಿಗಳಿಗೆ ತಲಾ 8,000 ರೂ. ದಂಡ ವಿಧಿಸಿತ್ತು. ದೋಷಿಗಳ ಪೈಕಿ ಓಲೇಕಾರ್ ಮಾತ್ರ ಹೈಕೋರ್ಟ್ ಮೆಟ್ಟಿಲೇರಿದ್ದರು.