ಬೆಂಗಳೂರು: ಬೇಸಿಗೆ ರಜೆಯ ನಂತರ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಬುಧವಾರ ಪುನರಾರಂಭಗೊಂಡಿದ್ದು, ಪಠ್ಯಕ್ರಮದ ಪರಿಷ್ಕರಣೆಯ ಹೇಳಿಕೆಗಳು ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದೆ. ಹೊಸ ಪಠ್ಯಕ್ರಮದ ಯಾವ ಭಾಗವನ್ನು ತೆಗೆದುಹಾಕಲಿದ್ದಾರೆ ಮತ್ತು ಯಾವುದನ್ನು ಸೇರಿಸಲಿದ್ದಾರೆ ಎಂಬುದು ಪೋಷಕರು, ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ. “ವಿದ್ಯಾರ್ಥಿಗಳ ಮನಸ್ಸಿನಲ್ಲಿವಿಷಬೀಜ ಬಿತ್ತುವ ಪಠ್ಯ ಭಾಗಗಳನ್ನು ಕೈಬಿಡಲಾಗುವುದು” ಎಂದು ಕಾಂಗ್ರೆಸ್ ಸರ್ಕಾರ ಹೇಳಿದೆ. ಮತ್ತೊಂದೆಡೆ, “ನಗರ ನಕ್ಸಲರು ಶಾಲಾ ಪಠ್ಯಕ್ರಮ ನಿಯಂತ್ರಿಸ ಹೊರಟರೆ ಸುಮ್ಮನಿರುವುದಿಲ್ಲ ಎಂದು ಬಿಜೆಪಿ ಎಚ್ಚರಿಸಿದೆ. ಈ ನಡುವೆ ಶಾಲೆಗಳ ಪುನರಾರಂಭದ ಮೊದಲ ದಿನವೇ ಮಕ್ಕಳಿಗೆ ಪುಸ್ತಕ, ಸಮವಸ್ತ್ರ ನೀಡಲಾಗಿದೆ.
ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾಥಮಿಕ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪುಸ್ತಕಗಳನ್ನು ವಿತರಿಸಿದರು. ಅಲ್ಲದೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಸರ್ಕಾರಿ ಮತ್ತು ಖಾಸಗಿ ಸೇರಿ ರಾಜ್ಯದಲ್ಲಿ ಒಟ್ಟು 62,229 ಶಾಲೆಗಳಿವೆ. ಅವುಗಳಲ್ಲಿ 25,278 ಪ್ರಾಥಮಿಕ, 36,951 ಪ್ರೌಢಶಾಲೆಗಳು ಮತ್ತು 15,867 ಮಾಧ್ಯಮಿಕ ಶಾಲೆಗಳು. ಅಲ್ಲದೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಊಟಕ್ಕೂ ಸಿದ್ಧತೆ ನಡೆದಿದೆ. 10 ದಿನಗಳ ಕಾಲ ಸೇತು ಬಂಧ ಕಾರ್ಯಕ್ರಮವನ್ನು ಪ್ರಾರಂಭಿಸಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ಶಾಲೆಗಳಿಗೆ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ನೀಡುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಹಂತ ಹಂತವಾಗಿ ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.