ಬೆಂಗಳೂರು, ಮೇ.16: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹುದ್ದೆಯ ರೇಸ್ ತೀವ್ರಗೊಳ್ಳುತ್ತಿದ್ದಂತೆ, ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಸಂಖ್ಯೆಯ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರಿಗೆ 80 ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ. ಸೋಮವಾರ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಬೇಕಿದ್ದ ಡಿ.ಕೆ.ಶಿವಕುಮಾರ್ ಅನಾರೋಗ್ಯದ ಕಾರಣ ನೀಡಿ ಸಭೆಯನ್ನು ರದ್ದುಗೊಳಿಸಿದ್ದರು.
ಅವರು ಮಂಗಳವಾರ ದೆಹಲಿಗೆ ತಲುಪಲಿದ್ದು, ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲು ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗಮನಾರ್ಹ ಗೆಲುವು ಸಾಧಿಸಿದ್ದು, ಈಗ ಸಿಎಂ ಕುರ್ಚಿ ಕಡೆ ಎಲ್ಲರ ಗಮನ ನೆಟ್ಟಿದೆ. ಆದರೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಮನಸ್ಸು ಮಾಡಿದ್ದಾರೆ. ಮತ್ತೊಂದು ಕಡೆ ಸೋನಿಯಾ ಗಾಂಧಿ ಅವರು ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಒಲವು ಹೊಂದಿದ್ದಾರೆ.
ಏತನ್ಮಧ್ಯೆ, ಬೆಂಗಳೂರು ಗ್ರಾಮಾಂತರ ಸಂಸದ ಮತ್ತು ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಸಹೋದರ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.