ತುಮಕೂರು : ಇಂದು ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಂಕ್ರಾಂತಿ ಆಚರಣೆ ಆರಂಭವಾಗಿದೆ. ತುಮಕೂರಿನ ಕ್ಯಾತಸಂದ್ರದಲ್ಲಿರುವ ಶ್ರೀ ಸಿದ್ದಗಂಗಾ ಮಠದಲ್ಲಿ ಕೂಡ ಹಬ್ಬವನ್ನು ಹೆಚ್ಚು ಸಂಭ್ರಮ ಮತ್ತು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಅಲಂಕಾರ ಮಾಡಲಾಗಿದೆ. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಎಳ್ಳು, ಬೆಲ್ಲ, ಕಬ್ಬು, ಕಡಲೆಕಾಯಿ, ಅವರೆಕಾಯಿ ಸೇರಿದಂತೆ ವಿವಿಧ ತಿನಿಸುಗಳನ್ನು ಇಟ್ಟು ವಿಶೇಷ ಅಲಂಕಾರ ಮಾಡಲಾಗಿದೆ.
ಹಬ್ಬದ ಹಿನ್ನೆಲೆ ಮಠದಲ್ಲಿ ಬೆಳಗ್ಗಿನಿಂದಲೂ ವಿಶೇಷ ಪೂಜೆ ಹೋಮ-ಹವನ ಮಾಡಲಾಗುತ್ತಿದ್ದು, ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಪ್ರತಿದಿನದಂತೆ ಶಿವನ ಪೂಜೆ ಮಾಡಿ ನಂತರ ಸಂಕ್ರಾಂತಿಯ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದಾರೆ.
ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಭಕ್ತಾದಿಗಳು ಮಠಕ್ಕೆ ಆಗಮಿಸಿ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದರು ಆದರೆ ಈ ಬಾರಿ ಕೊರೊನಾ ಹಿನ್ನಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಭಕ್ತರು ಹೆಚ್ಚು ಪಾಲ್ಗೊಳ್ಳಲು ಸಾಧ್ಯವಿಲ್ಲ. ಇನ್ನು ಶ್ರೀಮಠದ ಮಕ್ಕಳಿಗೆ ಎಳ್ಳು-ಬೆಲ್ಲ ನೀಡಿ ಸಂಕ್ರಾಂತಿಯನ್ನು ಆಚರಣೆ ಮಾಡಲಾಗಿದೆ.
ಇನ್ನು ರಾಜ್ಯದಲ್ಲಿ ಸಹ ಕೊರೊನಾ ಮತ್ತು ಕರ್ಫ್ಯೂ ನಡುವೆ ಸಂಕ್ರಾಂತಿ ಹಬ್ಬದ ಆಚರಣೆ ನಡೆಯುತ್ತಿದ್ದು, ಕೆಲವರು ನಿನ್ನೆ ಹಬ್ಬವನ್ನು ಆಚರಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ರೈತರು ಸಂಕ್ರಾಂತಿ ಹಬ್ಬವನ್ನು ಹೆಚ್ಚು ಭಕ್ತಿಯಿಂದ ಆಚರಿಸಿದ್ದು, ಹೊಲ, ಗದ್ದೆಗಳಿಗೆ ಮತ್ತು ಧಾನ್ಯಗಳಿಗೆ ಪೂಜೆ ಮಾಡಿ ಸಂಭ್ರಮಿಸಿದ್ದಾರೆ.
ಈ ಹಬ್ಬವನ್ನು ಸುಗ್ಗಿ ಹಬ್ಬ ಎಂದು ಗ್ರಾಮೀಣ ಭಾಗದಲ್ಲಿ ಆಚರಿಸಲಾಗುತ್ತದೆ. ಸಂಕ್ರಾಂತಿಯನ್ನು ಮುಖ್ಯವಾಗಿ ದಕ್ಷಿಣ ಭಾರತದ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು, ಕೇರಳಗಳಲ್ಲಿ ಆಚರಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನು ಮಕರರಾಶಿಯನ್ನು ಪ್ರವೇಶಿಸಿದ ದಿನವನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ.
111 ವರ್ಷಗಳ ಕಾಲ ಬದುಕಿದ್ದ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ತ್ರಿವಿಧ ದಾಸೋಹದ ಮೂಲಕ ಜಗದ್ವಿಖ್ಯಾತಿ ಗಳಿಸಿದವರು. ಅವರ ಜೀವನ ಸಾಧನೆಗೆ ರಾಜ್ಯದಲ್ಲಿ ಅಷ್ಟೇ ಅಲ್ಲದೇ, ಇಡೀ ದೇಶವ್ಯಾಪಿ ಅವರು ಅಪಾರ ಗೌರವಾದರಗಳಿಗೆ ಪಾತ್ರರಾದವರು. ಅವರು ಹಾಕಿಕೊಟ್ಟ ಹೆಜ್ಜೆಯಲ್ಲಿಯೇ ಮಠ ಈಗಲೂ ನಡೆಯುತ್ತಿದೆ.
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿದ್ದ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿದ್ದರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದರು