ತುಮಕೂರು: ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸದಲ್ಲಿ ಸುಡುವ ಬಿಸಿಲನ್ನು ಲೆಕ್ಕಿಸದೇ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.
ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೆರಿದ್ದು, ಮಧ್ಯಾಹ್ನ ೧.೧೫ಕ್ಕೆ ಗರುಡ ರಥದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವಕ್ಕೆ ಚಾಲನೆ ದೊರೆಯಿತು.
ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಹರಕೆ ಸಲ್ಲಿಸಿದರು.
ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸವದ ಅಂಗವಾಗಿ ನಗರದಿಂದ ಶೆಟ್ಟಿಹಳ್ಳಿಗೆ ಹೋಗುವ ದಾರಿಯುದ್ಧಕ್ಕೂ ಹಾಗೂ ರಿಂಗ್ ರಸ್ತೆಯುದ್ದಕ್ಕೂ ಭಕ್ತಾದಿಗಳು ಪೆಂಡಾಲ್ಗಳನ್ನು ಹಾಕಿಕೊಂಡು ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದ್ದು ವಿಶೇಷವಾಗಿತ್ತು.
ಹಾಗೆಯೇ ಹೆಚ್.ಎಂ.ಎಸ್. ಕಾಲೇಜು ಮುಂಭಾಗ ಮುಸ್ಲಿಂ ಬಾಂಧವರು ಸಹ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ, ನೀರು, ಕೋಸಂಬರಿ ಹಂಚುತ್ತಿದ್ದ ದೃಶ್ಯ ಕಂಡು ಬಂತು.
ರಥೋತ್ಸವದಲ್ಲಿ ಸಹಸ್ರಾರು ಭಕ್ತಾದಿಗಳು ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳು ಪಾಲ್ಗೊಂಡಿದ್ದರು.