ಭಾಲ್ಕಿ: ಕಾಂಗ್ರೆಸ್ ಸರ್ಕಾರದಲ್ಲಿ ನೂತನ ಸಚಿವರಾಗಿರುವ ಈಶ್ವರ ಖಂಡ್ರೆ ಅವರು ಸಿದ್ಧಗಂಗಾ ಮತ್ತು ಸಿರಿಗೆರೆ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು.
ಅರಣ್ಯ ಮತ್ತು ಪರಿಸರ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅವರು ಮಂಗಳವಾರ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮತ್ತು ಮಠದ ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮೀಜಿ ಅವರನ್ನು ಸತ್ಕರಿಸಿದರು.
ನಂತರ ಸಿದ್ಧಲಿಂಗ ಸ್ವಾಮೀಜಿ ಅವರು ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಿದರು.
ಇದಕ್ಕೂ ಮುನ್ನ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯ ತರಳಬಾಳು ಬೃಹನ್ಮಠಕ್ಕೆ ಭೇಟಿ ನೀಡಿದ ಸಚಿವ ಖಂಡ್ರೆ, ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಸನ್ಮಾನಿಸಿದರು. ನಂತರ ಶ್ರೀಗಳು ಸಚಿವರನ್ನು ಸನ್ಮಾನಿಸಿದರು. ಶಾಸಕ ವೀರೇಂದ್ರ ಪಪ್ಪಿ, ನಿವೃತ್ತ ಎಂಜಿನಿಯರ್ ವಿಲಾಸ ಮಾಶೆಟ್ಟೆ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಶಶಿಧರ ಕೋಸಂಬೆ ಹಾಗೂ ಉಪಾಧ್ಯಕ್ಷ ಸಂಗಮೇಶ ಹುಣಜೆ ಮದಕಟ್ಟಿ ಇದ್ದರು.