ಬೀದರ್: ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರದಲ್ಲಿ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನದ ಸಾಧ್ಯತೆಗಳು ದಟ್ಟವಾಗಿದ್ದು, ಪ್ರಬಲ ಲಿಂಗಾಯತ ಸಮುದಾಯದ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ರಹೀಮ್ಖಾನ್ ಇಬ್ಬರೂ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ಸೇರುವ ಸಾಧ್ಯತೆಗಳು ದಟ್ಟವಾಗಿವೆ.
ಕಳೆದ 2016ರಿಂದ 2018ರ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಪೌರಾಡಳಿತ ಸಚಿವರಾಗಿದ್ದ ಈಶ್ವರ ಖಂಡ್ರೆ ಹಾಗೂ 2018ರಿಂದ 2019ರ ವರೆಗೆ ರಾಜ್ಯದ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಚಿವರಾಗಿದ್ದ ರಹೀಮ್ ಖಾನ್ ಇದೀಗ ಮತ್ತೊಂದು ಅವಧಿಯ ಸಚಿವ ಸ್ಥಾನ ಸಿಕ್ಕಲ್ಲಿ ಅಚ್ಚರಿಯಿಲ್ಲ.
ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿದೆ. ಅಲ್ಲದೆ ಲಿಂಗಾಯತ ಹಾಗೂ ಮುಸ್ಲಿಂ ಸಮುದಾಯ ಶಾಸಕರಿಗೇನೂ ಕಮ್ಮಿ ಇಲ್ಲ. ಅದಾಗ್ಯೂ ಭಾಲ್ಕಿ ಕ್ಷೇತ್ರಕ್ಕೆ 4 ಬಾರಿ ಶಾಸಕರಾಗಿ, ಸಿದ್ದರಾಮಯ್ಯ ಆಡಳಿತದಲ್ಲಿ ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಈಶ್ವರ ಖಂಡ್ರೆ ಈಗ ಕೆಪಿಸಿಸಿ ಕಾರ್ಯಾಧ್ಯರೂ ಅಲ್ಲದೆ, ಅಖಿಲ ಭಾರತ ವೀರಶೈವ ಲಿಂಗಾಯತ ಸಮುದಾಯವನ್ನೂ ಪ್ರತಿನಿಧಿಸುತ್ತಿರುವ ರಾಜಕಾರಣಿ. ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಶಾಸಕರನ್ನಾಗಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎಂಬುವುದು ಸಿದ್ದು ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ಸಮೀಪ ಕೊಂಡೊಯ್ಯಲಿದೆ.