ಬೀದರ್: ‘ಲಿಂಗಾಯತ ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆಗಾಗಿ ಹೈದರಾಬಾದ್ನಲ್ಲಿ ಜೂನ್ 4 ರಂದು ಹಮ್ಮಿಕೊಂಡಿರುವ ಲಿಂಗಾಯತ ಮಹಾ ರ್ಯಾಲಿಯಲ್ಲಿ ಜಿಲ್ಲೆಯ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ರಾಷ್ಟ್ರೀಯ ಬಸವ ದಳದ ಬೀದರ್ ದಕ್ಷಿಣ ಉಸ್ತುವಾರಿ ಮಹಾಲಿಂಗ ಸ್ವಾಮಿ ಚಟ್ನಳ್ಳಿ ಮನವಿ ಮಾಡಿದ್ದಾರೆ.
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ನಡೆಸುತ್ತಿರುವ ಹೋರಾಟ ಲಿಂಗಾಯತರ ಅಸ್ಮಿತೆಯ ಹೋರಾಟವಾಗಿದೆ. ಹೀಗಾಗಿ ಲಿಂಗಾಯತರು ಮಹಾ ರ್ಯಾಲಿಯನ್ನು ಐತಿಹಾಸಿಕಗೊಳಿಸಲು ಶ್ರಮಿಸಬೇಕು ಎಂದು ಹೇಳಿದ್ದಾರೆ.
ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆ ದೊರೆತರೆ ಲಿಂಗಾಯತರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ಸಿಗಲಿವೆ. ಲಿಂಗಾಯತರ ಏಳಿಗೆಗೆ ನೆರವಾಗಲಿದೆ. ಸ್ವತಂತ್ರ ಧರ್ಮ ಮಾನ್ಯತೆ ಕೊಡುವವರೆಗೂ ಲಿಂಗಾಯತರ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.