ಮೂಡುಬಿದಿರೆ: ಜನಪರ ಯೋಜನೆಗಳಿಂದ, ಜನರ ನೈಜ್ಯ ಸೇವೆ ಮಾಡುವ ಕಾಂಗ್ರೆಸ್ ಸರ್ಕಾರದ ಅಧಿಕಾರ ಶಾಶ್ವತ. ಬಿಜೆಪಿ ಮತ್ತು ಜೆಡಿಎಸ್ ಅಧಿಕಾರ ಕೇವಲ ನೀರ ಮೇಲಿನ ಗುಳ್ಳೆಗಳಿದ್ದಂತೆ ಯಾವಾಗ ಬೇಕಾದರೂ ಒಡೆದು ಹೋಗಬಹುದು ಎಂದು ಕೇಂದ್ರ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ.
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಭಾನುವಾರ ಸಂಜೆ ನಡೆದ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮ್ಕಿ ಹಕ್ಕನ್ನು, ಅಕ್ರಮ ಸಕ್ರಮ ಕಾನೂನುಗಳನ್ನು ಜಾರಿಗೆ ತಂದಿದ್ದೇವೆ ಆದರೆ ಇದೀಗ ಒಬ್ಬ ವ್ಯಕ್ತಿ ಈ ಕಾನೂನುಗಳನ್ನು ತಡೆ ಹಿಡಿಯುವಂತೆ ಸುಪ್ರಿಂ ಕೋರ್ಟ್ ಗೆ ಹೋಗಿ ರದ್ದು ಮಾಡುವಂತೆ ಮನವಿ ಮಾಡಿದ್ದಾರೆ. ರದ್ದು ಮಾಡಿದರೂ ರೈತರು ಈ ಬಗ್ಗೆ ಹೆದರಬೇಕಾಗಿಲ್ಲ. ತಾನು ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರಲ್ಲಿ ಮಾತನಾಡಿಸಿದ್ದೇನೆ. ಕಾನೂನನ್ನು ತಿದ್ದುಪಡಿ ಮಾಡುವಂತಹ ಅವಕಾಶಗಳಿವೆ. ಅಧಿಕಾರದಲ್ಲಿ ಆಸೆಯಿಂದ ಅಧಿಕಾರದ ಗದ್ದುಗೆಯನ್ನು ಏರಿ ಮುಖ್ಯ ಮಂತ್ರಿಯಾಗಿದ್ದ ಯಡ್ಡಿಯೂರಪ್ಪ ಅವರು ಯಾವುವೇ ಕೆಲಸಕ್ಕೆ ಹೋದಾಗ ತನ್ನ ಹಿಂದೆ ಶೋಭಾ ಕರಂದ್ಲಾಜೆಯನ್ನು ಕರೆದುಕೊಂಡು ಹೋಗುತ್ತಿದ್ದರು ಮತ್ತು ಭ್ರಷ್ಠಾಚಾರದಲ್ಲಿ ತೊಡಗಿಸಿಕೊಂಡಿದ್ದರು ಆದರೆ ಜೈಲಿಗೆ ಹೋಗುವಾಗ ತಾನು ಮಾಡಿದ ಪಾಪದ ಜೊತೆಗೆ ಒಬ್ಬರೇ ಹೋದರು ಎಂದು ವ್ಯಂಗ್ಯವಾಡಿದರು.
ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾಂಗ್ರೆಸ್ ಸರಕಾರವು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಪುರಸಭಾ ಅಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ, ಉಪಾಧ್ಯಕ್ಷೆ ಶಕುಂತಲಾ ದೇವಾಡಿಗ, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್, ಜಿ.ಪಂ ಅಭ್ಯರ್ಥಿ ಪ್ರಮೋದ್ ಕುಮಾರ್, ಅಕ್ರಮ ಸಕ್ರಮ ಅಧ್ಯಕ್ಷ ಪಿ.ಕೆ.ತೋಮಸ್, ಕಾಂಗ್ರೆಸ್ ಮುಖಂಡರುಗಳಾದ ಎಸ್.ಡಿ ಸಂಪತ್ ಸಾಮ್ರಾಜ್ಯ, ಜಿ.ಎ ಬಾವಾ, ಶಾಲೆಟ್ ಪಿಂಟೋ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರತ್ನಾಕರ ಸಿ.ಮೊಯಿಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.