ಕಾಸರಗೋಡು: ಬಿಜೆಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಮೇಲೆ ಕಲ್ಲೆಸೆದ ಹಿನ್ನಲೆಯಲ್ಲಿ ಹಿಂಸಾಚಾರ ನಡೆದಿದ್ದು, ಪರಿಸ್ಥಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಬಳಸಿದರು.
ಹಿಂಸಾಚಾರದಲ್ಲಿ ಐದಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಸಿಪಿಎಂನ ಹಿಂಸಾಚಾರ ಮತ್ತು ಅಹಿಷ್ಣುತೆ ಘೋಷಣೆಯಡಿ ಬಿಜೆಪಿ ಜಿಲ್ಲಾ ಸಮಿತಿ ಚೆರ್ವತ್ತೂರಿನಿಂದ ಚಿಮೇನಿ ತನಕ ಪಾದಯಾತ್ರೆ ಹಮ್ಮಿಕೊಂಡಿತ್ತು.
ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ ಹಮ್ಮಿಕೊಂಡ ಪಾದಯಾತ್ರೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ. ಪಿ ಶ್ರೀಶನ್ ಪಾದಯಾತ್ರೆಗೆ ಚಾಲನೆ ನೀಡಿದ್ದರು. ಪಾದಯಾತ್ರೆ ಅಲ್ಪ ದೂರ ತಲುಪುತ್ತಿದ್ದಂತೆ ಕಲ್ಲೆಸೆತ ಉಂಟಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ಹಿಂಸಾಚಾರವನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಪರಿಸ್ಥಿತಿ ಹತೋಟಿಗೆ ಬರದ ಹಿನ್ನಲೆಯಲ್ಲಿ ಅಶ್ರುವಾಯು ಬಳಸಿದರು.
ಘರ್ಷಣೆ, ಲಾಠಿ ಪ್ರಹಾರ ಮತ್ತು ಅಶ್ರುವಾಯು ಬಳಕೆಯಿಂದ ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು, ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.