ಮಂಗಳೂರು : ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಮುಂದಿನ ವರ್ಷದಿಂದ ಜಾರಿಯಾಗಲಿದೆ. ಅದರ ಅನುಷ್ಠಾನಕ್ಕೆ ಬೇಕಾದ ತಯಾರಿಗಳು ಈಗಾಗಲೇ ಪ್ರಾರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ .ಅಶ್ವಥ್ ನಾರಾಯಣ ತಿಳಿಸಿದರು.
ಕೇಂದ್ರ ಸರ್ಕಾರದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈಗಾಗಲೇ ಅದಕ್ಕೆ ಬೇಕಾದ ಕಾರ್ಯಪಡೆಯನ್ನು ರಚಿಸಿ ತಮ್ಮ ವರದಿಯನ್ನು ಸರ್ಕಾರದ ಎದುರು ಸಲ್ಲಿಸಿದ್ದು, ಅದನ್ನು ಸಚಿವ ಸಂಪುಟದಲ್ಲಿ ಅನುಮೋದಿಸಲಾಗಿದೆ. ನಂತರದ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅಗತ್ಯವಿರುವ ರಚನಾತ್ಮಕ ಮತ್ತು ಆಡಳಿತ ಸುಧಾರಣೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅಶ್ವಥ್ ನಾರಾಯಣ ಹೇಳಿದರು.
ಈ ಹೊಸ ನೀತಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ಎಲ್ಲಾ ರೀತಿಯ ನೆರವನ್ನು ನೀಡಲಿದೆ. ಒಂದು ಸುಭದ್ರ ಹಾಗೂ ಅಭಿವೃದ್ಧಿ ಹೊಂದಿದ ರಾಜ್ಯ, ರಾಷ್ಟ್ರವನ್ನು ನಿರ್ಮಿಸಲು ಸುಸರ್ಜಿತ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.