ಮಂಗಳೂರು: ದೇಶದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಹೊರತುಪಡಿಸಿ ನೆಹರೂ ಅವರಿಂದ ಮನಮೋಹನ್ ಸಿಂಗ್ವರೆಗಿನ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ, ತುಷ್ಟೀಕರಣ, ವಿಭಜನೆಯ ರಾಜನೀತಿ ಪ್ರಧಾನವಾಗಿತ್ತು. ಬಿಜೆಪಿಯ ಆಡಳಿತದಲ್ಲಿ ಭ್ರಷ್ಟಾಚಾರದ ಯಾವುದೇ ಆರೋಪವಿಲ್ಲ. ದೇಶವನ್ನು ಪರಮವೈಭವದ ಸ್ಥಿತಿಗೆ ಕೊಂಡೊಯ್ಯುವುದೇ ಬಿಜೆಪಿಯ ಧ್ಯೇಯವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ಎರಡು ದಿನಗಳ ಬಿಜೆಪಿ ಕರ್ನಾಟಕ ರಾಜ್ಯ ಪ್ರಕೋಷ್ಠಗಳ ಚಿಂತನಾ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು.
ಅಟಲ್ ಬಿಹಾರಿ ವಾಜಪೇಯಿ ಹಾಗೂ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಚಿಂತನೆಯೊಂದಿಗೆ ಬಿಜೆಪಿ ಸರಕಾರ ಆಡಳಿತ ನಡೆಸುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಹಲವು ಬಾರಿ ವಿಭಜನೆಗೊಂಡಿವೆ. ಆದರೆ, ತನ್ನ ಸಿದ್ಧಾಂತ ಮತ್ತು ವಿಚಾರಧಾರೆಯ ಬಲದಿಂದ ಬಿಜೆಪಿ ರಾಜಕೀಯ ಪಕ್ಷವಾಗಿ ವಿಭಜನೆಗೊಳ್ಳದೆ ಪ್ರಬಲವಾಗಿ ತಳವೂರಿದೆ ಎಂದರು.
ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಧ್ಯೇಯದೊಂದಿಗೆ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿ ತನ್ನ ಕಾರ್ಯಪದ್ಧತಿ, ವಿಚಾರಧಾರೆಯೊಂದಿಗೆ ರಾಜಿ ಮಾಡಿಕೊಂಡಿಲ್ಲ. ಧ್ಯೇಯ ನಿಷ್ಠ ಕಾರ್ಯಕರ್ತರಲ್ಲಿ ವ್ಯಕ್ತಿತ್ವ ನಿರ್ಮಾಣಕ್ಕಾಗಿ ಚಿಂತನಾ ವರ್ಗ ನಡೆಸಲಾಗುತ್ತಿದೆ ಎಂದರು.
ದೇಶದಲ್ಲಿ ಮೊದಲ ಬಾರಿಗೆ ಬಿಜೆಪಿ ಕರ್ನಾಟಕ ಘಟಕ ವತಿಯಿಂದ ಮಂಗಳೂರಿನಲ್ಲಿ ಪ್ರಕೋಷ್ಠಗಳ ಚಿಂತನಾ ವರ್ಗ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ೨೪ ಪ್ರಕೋಷ್ಠ ರಚಿಸಿ, ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಬಿಜೆಪಿ ರಾಜ್ಯ ಘಟಕದ ಸಹಲ್, ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಮತ್ತು ಪೂರ್ಣ ಪ್ರಮಾಣದಲ್ಲಿ ಪ್ರಕೋಷ್ಠಗಳ ಸಂಘಟನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ನಳಿನ್ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಎಂ. ಮಾತನಾಡಿ, ದೇಶದಲ್ಲಿ ಪರಿವರ್ತನೆ ತರಬೇಕು ಎಂಬ ದೃಷ್ಟಿಯಿಂದ ಬಿಜೆಪಿ ಅಸ್ತಿತ್ವಕ್ಕೆ ಬಂದಿದೆ. ಸಿದ್ಧಾಂತ, ಕಾರ್ಯಪದ್ಧತಿ, ನಿರಂತರ ಪರಿಶ್ರಮದಿಂದ ಪಕ್ಷ ಇಂದು ಬೆಳೆದಿದೆ. ಕಾರ್ಯಕರ್ತರನ್ನು ಮೌಲ್ಯಾಧಾರಿತ ಬದುಕಿನ ಕಡೆಗೆ ಕೊಂಡೊಯ್ಯಲು ಚಿಂತನಾ ವರ್ಗ ಆಯೋಜಿಸಲಾಗುತ್ತಿದೆ ಎಂದರು.
ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಂ.ಬಿ. ಭಾನುಪ್ರಕಾಶ್ ಉಪಸ್ಥಿತರಿದ್ದರು. ಕೈಗಾರಿಕಾ ಪ್ರಕೋಷ್ಠ ರಾಜ್ಯ ಸಂಚಾಲಕ ಪ್ರದೀಪ ಪೈ ಸ್ವಾಗತಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ ವಂದಿಸಿದರು. ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ ಡಾ. ಶಿವಯೋಗಿಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.