ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಮುಂಡಾಜೆ- ಕಾಪು ರಕ್ಷಿತಾರಣ್ಯದ ರಸ್ತೆಯಲ್ಲಿ, ಭಾನುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಜಿಂಕೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದೆ.
ವಾಹನ ಡಿಕ್ಕಿ ಹೊಡೆದು ರಸ್ತೆ ಬದಿ ಒದ್ದಾಡುತ್ತಿದ್ದ ಜಿಂಕೆಗೆ ಅರಣ್ಯ ಇಲಾಖೆ ಸಿಬ್ಬಂದಿ, ಮುಂಡಾಜೆ ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್ ನಾಯ್ಕ್, ಶೇಖರ ಅಂಬಡ್ತ್ಯಾರ್ ಹಾಗೂ ಸ್ಥಳೀಯರ ಸಹಕಾರದಲ್ಲಿ ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಿದ್ದರು.ಆದರೆ ಚಿಕಿತ್ಸೆಗೆ ಸ್ಪಂದಿಸದ ಜಿಂಕೆ ಮೃತಪಟ್ಟಿತು.
ಅಪಘಾತದಿಂದ ತಲೆ ಹಾಗೂ ಸೊಂಟದ ಭಾಗಕ್ಕೆ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಸುಮಾರು ಒಂದೂವರೆ ವರ್ಷ ಪ್ರಾಯದ ಗಂಡು ಜಿಂಕೆಯ ಮರಣೋತ್ತರ ಪರೀಕ್ಷೆಯನ್ನು ಉಜಿರೆ ಪಶು ಚಿಕಿತ್ಸಾಲಯದ ಪಶುವೈದ್ಯಾಧಿಕಾರಿ ಡಾ.ಕಾರ್ತಿಕ್ ನಡೆಸಿದರು. ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶುವೈದ್ಯಕೀಯ ಪರೀಕ್ಷಕ ನಾಗಶಯನ ರಾವ್,ಉಪ ವಲಯ ಅರಣ್ಯಾಧಿಕಾರಿ ಯತಿಂದ್ರ ಹಾಗೂ ಅರಣ್ಯ ರಕ್ಷಕ ಶರತ್ ಶೆಟ್ಟಿ ಸಹಕರಿಸಿದರು.