ಬಂಟ್ವಾಳ : ಪ್ರಜ್ಞಾವಂತಿಕೆಯ ದೀವಿಗೆಯನ್ನು ಹಚ್ಚುವಲ್ಲಿ ಸ್ವಚ್ಛತೆ ಅತಿ ಮುಖ್ಯವಾಗಿದ್ದು, ಜನಪ್ರತಿನಿಧಿಗಳು- ಸಾರ್ವಜನಿಕರು ಜತೆಯಾಗಿ ಕಾರ್ಯನಿರ್ವಹಿಸಿದಾಗ ಸ್ವಚ್ಛ ಭಾರತ್ ಕಲ್ಪನೆ ಯಶಸ್ವಿಯಾಗಲು ಸಾಧ್ಯ ಎಂದು ದ.ಕ.ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿ ಕಾರಿ ಡಾ.ಕುಮಾರ್ ಹೇಳಿದರು.
ಅವರು ಶುಕ್ರವಾರ ಕಾವಳಮೂಡೂರು ಗ್ರಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ), ಕಾವಳಮೂಡೂರು ಗ್ರಾ.ಪಂ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆದ ಸ್ವಚ್ಛತಾ ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇಡೀ ಜಿಲ್ಲೆಯ ಪ್ಲಾಸ್ಟಿಕನ್ನು ವೈಜ್ಞಾನಿಕವಾಗಿ ಮರುಬಳಕೆಯ ನಿಟ್ಟಿನಲ್ಲಿ ಜಿಲ್ಲೆಗೆ ೨.೫ ಕೋ.ರೂ.ವೆಚ್ಚದ ಎಂಆರ್ಐ ಘಟಕ ಮಂಜೂರಾಗಿದ್ದು, ಆದರೆ ಅದರ ಅನುಷ್ಠಾನಕ್ಕೆ ಎಲ್ಲಿ ಹೋದರೂ ತಪ್ಪು ಕಲ್ಪನೆಯಿಂದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮೂಲಭೂತ ಹಕ್ಕಿನ ಕುರಿತು ಮಾತನಾಡುವ ನಾವು ಕರ್ತವ್ಯದ ಕುರಿತು ಕೂಡ ಮಾತನಾಡಬೇಕಿದೆ ಎಂದವರು ಅಭಿಪ್ರಾಯಿಸಿದರು.
ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಹಾಯಕ ನಿರ್ದೇಶಕ ದಿನೇಶ್, ಗ್ರಾ.ಪಂ.ಉಪಾಧ್ಯಕ್ಷ ಅಜಿತ್, ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.
ಗ್ರಾಮೀಣ ಜನತೆಯಲ್ಲಿ ಪ್ಲಾಸ್ಟಿಕ್ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ತಂದವರಿಗೆ ಅಕ್ಕಿ ವಿತರಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಸ್ತಾವನೆಗೈದರು. ಸ್ವಚ್ಛಗ್ರಾಮದ ಪರಿಕಲ್ಪನೆ ಪ್ರತೀ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸಾಕಾರಗೊಳ್ಳಬೇಕಿದೆ, ಈ ಹಿನ್ನೆಲೆಯಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪತ್ರಕರ್ತರ ಸಂಘದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸಾಮಾಜಿಕ ಹೊಣೆಗಾರಿಕೆಯ ನಿಟ್ಟಿನಲ್ಲಿ ಪತ್ರಕರ್ತರ ಸಂಘ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿ ಗ್ರಾಮೀಣ ಜನತೆಯ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕೇವಲ ಕಾಟಾಚಾರದ ಕಾರ್ಯಕ್ರಮವನ್ನು ಮಾಡದೇ ಜನರ ನೋವನ್ನು ಅರಿತು ಅದಕ್ಕೆ ಪೂರಕ ಕಾರ್ಯಕ್ರಮ ಸಂಘಟಿಸಿರುವುದು ಶ್ಲಾಘನೀಯ ಎಂದು ಜಿ.ಪಂ.ಸಿಇಒ ಡಾ.ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್ ಸ್ವಾಗತಿಸಿದರು. ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಸಂದೀಪ್ ಸಾಲ್ಯಾನ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಗ್ರಾ.ಪಂ.ವ್ಯಾಪ್ತಿಯ ಎನ್.ಸಿ.ರೋಡ್ ಜಂಕ್ಷನ್ ನಿಂದ ಗ್ರಾ.ಪಂ.ಕಚೇರಿ ವಠಾರದವರೆಗೆ ಸ್ವಚ್ಛತಾ ಜಾಗೃತಿ ಜಾಥಾ ನಡೆಸಲಾಯಿತು. ಬಳಿಕ ಪತ್ರಕರ್ತರ ಸೇರುವಿಕೆಯಲ್ಲಿ ಜಾಗೃತಿ ಹಾಡು ಹಾಗೂ ರೂಪಕ ಪ್ರದರ್ಶಿಸಲಾಯಿತು.