ಬೆಳ್ತಂಗಡಿ: ಸಾಹಿತ್ಯ ಸಮ್ಮೇಳನಗಳಿಗೆ ಹೊಸತನ ನೀಡುವುದು, ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಿಸುವುದರೊಂದಿಗೆ ಮಾದರಿ ಜಿಲ್ಲೆಯನ್ನಾಗಿ ರೂಪಿಸುವುದೇ ನನ್ನ ಗುರಿಯಾಗಿದೆ ಎಂದು ದ.ಕ.ಜಿಲ್ಲಾ ಕ.ಸಾ.ಪ.ಅಧ್ಯಕ್ಷ ಎಂ.ಪಿ.ಶ್ರೀನಾಥ್ ಹೇಳಿದರು.
ಶುಕ್ರವಾರ ಇಲ್ಲಿನ ಜ.ಜಾ.ವೇದಿಕೆಯ ಸಭಾಭವನದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಹಿರಿಯ, ಕಿರಿಯರ ಮಾರ್ಗದರ್ಶನದೊಂದಿಗೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಾಹಿತ್ಯದ ಒಲವು ಮೂಡಿಸಲು ತಕ್ಕ ವೇದಿಕೆಗಳನ್ನು ಒದಗಿಸುವುದು, ಅಜೀವ ಸದಸ್ಯರನ್ನು ನೋಂದಾಯಿಸುವ ಪ್ರಕ್ರಿಯೆ ಶೀಘ್ರವಾಗಿ ನಡೆಯಲಿದೆ. ಸಾಹಿತ್ಯ ಚಟುವಟಿಕೆಗಳನ್ನು ಹೆಚ್ಚಿಸಲು ಸಮಾಲೋಚನಾ ಸಭೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದ ಅವರು ದೊರಕಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಚುಶ್ರೀ ಬಾಂಗೇರು ವಹಿಸಿದ್ದರು. ಸದಸ್ಯ ದೇವಿಪ್ರಸಾದ್ ಅಭಿನಂದನಾ ಭಾಷಣ ಮಾಡಿದರು. ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ , ಉಪಸ್ಥಿತರಿದ್ದರು. ಕಾರ್ಯದರ್ಶಿ ಜಾರಪ್ಪ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ಪ್ರಸಾದ ಶೆಟ್ಟಿ ವಂದಿಸಿದರು.