ಲಾಲ್ಬಾಗ್: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ಪಾಠದ ಜತೆ ಕ್ರೀಡಾ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ, ಮತ್ತು ಕ್ರೀಡಾ ಇಲಾಖೆ ದ.ಕ., ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಮಂಗಳಾ ಕ್ರೀಡಾಂಗಣದಲ್ಲಿ ರವಿವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಮಟ್ಟದ ಕ್ರೀಡಾಕೂಟ 2022-23 ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆ ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅವಶ್ಯ. ಕ್ರೀಡೆ ಯಲ್ಲಿ ಸೋಲು-ಗೆಲುವು ಸಾಮಾನ್ಯ. ಎರಡನ್ನೂ ಸಮನಾಗಿ ಸ್ವೀಕರಿ ಸಬೇಕು. ಗೆದ್ದರೆ ಹಿಗ್ಗದೆ, – ಸೋತರೆ ಕುಗ್ಗದೆ ಸಾಧಿಸುವ ಛಲ ಮೈಗೂಡಿಸಿಕೊಳ್ಳಬೇಕು. ನಿರಂತರ ಕಠಿನ, ಶ್ರಮದಿಂದ ಸಾಧನೆ ಸಾಧ್ಯ . ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತೀ ಮುಖ್ಯ. ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಎಂದು ದ.ಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ವೈ. ನ್ಯಾಕ್ ಅವರು ಮಾತನಾಡಿ ತಿಳಿಸಿದರು.
ವೈಯುಕ್ತಿಕ ಮತ್ತು ಗುಂಪು ವಿಭಾಗದಲ್ಲಿ ಕ್ರೀಡಾಕೂಟ ನಡೆಯಿತು. ಗುಂಪು ವಿಭಾಗ (ಮುಕ್ತ)ದಲ್ಲಿ ಕ್ರಿಕೆಟ್, ವಾಲಿಬಾಲ್, ಕಬಡ್ಡಿ ಪ್ರೋಬಾಲ್, ಹಗ್ಗಜಗ್ಗಾಟ, ಟೆನ್ನಿಕಾಯ್ಡ್ ಮತ್ತು ವೈಯುಕ್ತಿಕ ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ 100 ಮೀ., 200 ಮೀ., 400 ಮೀ., 4×100 ಮೀ. ರಿಲೇ, ಶಾಟ್ಪುಟ್, ಲಾಂಗ್ ಜಂಪ್, ಹೈಜಂಪ್ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಕಡೆಗಳಿಂದ ಸುಮಾರು 400 ಕ್ಕೂ ಹೆಚ್ಚಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಭಾಗವಹಿಸಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳಾದ ಹರಿದಾಸ್ ಕೂಳೂರು, ಜಯರಾಮ್, ಸೀತಾರಾಮ್, ಶಿವಪ್ರಸಾದ್, ರಾಜೇಶ್ ಕಲ್ಲಡ್ಕ ವಸಂತಿ, ಹೇಮಾವತಿ, ಚಂದ್ರ ಕುಮಾರ್, ರಘುರಾಜ್ ಕದ್ರಿ ಉಪಸ್ಥಿತರಿದ್ದರು.