ಬಂಟ್ವಾಳ: ಕೇವಲ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ತು ದಿನಾಚರಣೆ ಇವತ್ತು ಜಿಲ್ಲೆ ಮತ್ತು ತಾಲೂಕು ಮಟ್ಟಕ್ಕೆ ವಿಸ್ತರಿಸಿ ಈ ದಿನ ಏಕ ಕಾಲದಲ್ಲಿ ಎಲ್ಲೆಡೆ ಆಚರಿಸಲಾಗುತ್ತದೆ. ಅಲ್ಲದೆ ಮುಂದೆ ಹೋಬಳಿಯ ಮತ್ತು ಗ್ರಾಮ ಮಟ್ಟದಲ್ಲೂ ತನ್ನ ಕಾರ್ಯವ್ಯಾಪ್ತಿಯನನ್ನು ವಿಸ್ತರಿಸುವ ಯೋಜನೆಯನ್ನು ಪರಿಷತ್ತು ಇರಿಸಿಕೊಂಡಿದೆ.ಇಂತಹ ದಿನಾಚರಣೆಯನ್ನು ಆಚರಿಸುವುದರಿಂದ ಸಾಹಿತ್ಯದ ವಿದ್ಯಾರ್ಥಿಗಳಿಗೆ ಅಧ್ಯಯನ ಕ್ಕೂ ಸಹಕಾರಿಯಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಹೇಳಿದರು.
ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ತಿನ ಘಟಕ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಪ್ರಧಾನ ಭಾಷಣಕಾರರಾಗಿ ಉಪನ್ಯಾಸ ನೀಡಿದ ದೀಪಿಕಾ ಪ್ರೌಢಶಾಲೆಯ ವಿಶ್ರಾಂತ ಮುಖ್ಯೋಪಾಧ್ಯಾಯರಾದ ಮಹಾಬಲೇಶ್ವರ ಹೆಬ್ಬಾರ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ದೀರ್ಘ ಇತಿಹಾಸವನ್ನು ವಿವರಿಸಿದರು.
ವಕೀಲರಾದ ರವೀಂದ್ರ ಕುಕ್ಕಾಜೆ ಅವರು ದೀಪ ಬೆಳಗಿಸಿ ಸಂಸ್ಥಾಪನಾ ಸಮಾರಂಭಕ್ಕೆ ಶುಭ ಹಾರೈಸಿ ಮಾತನಾಡಿದರು. ಕಸಾಪ ಗೌರವ ಪ್ರಧಾನ ಕಾರ್ಯದರ್ಶಿಗಳಾದ ವಿ.ಸು.ಭಟ್ ಮತ್ತು ರಮಾನಂದ ನೂಜಿಪ್ಪಾಡಿ ಉಪಸ್ಥಿತರಿದ್ದರು. ಕಸಾಪ ಜಿಲ್ಲಾ ಘಟಕದ ಸದಸ್ಯ ಪೂವಪ್ಪ ನೇರಳಕಟ್ಟೆ ಸ್ವಾಗತಿಸಿ ಪ್ರಸ್ತಾವನೆಗೈದರು. ಕು.ದೀಕ್ಷಾ ಹಾಗೂ ಕು.ವಿಭಾ ನಾಡಗೀತೆ ಹಾಡಿದರು. ಕಸಾಪ ಬಂಟ್ವಾಳ ಘಟಕದ ಸದಸ್ಯೆಯರಾದ ಗೀತಾ ಕೊಂಕೋಡಿ ವಂದಿಸಿ ರಜನಿ ಚಿಕ್ಕಯಮಠ ನಿರೂಪಿಸಿದರು. ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಅತಿಥಿಗಳನ್ನು ಗೌರವಿಸಿದರು.