ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರ ಪರವಾಗಿ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರು ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು.
ಚುನಾವಣೆಯ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮ ಪಂಚಾಯತ್ನಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿರುವ ನಾಗೇಶ ಎಂಬುವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಹರೀಶ್ ಪೂಂಜಾ ಪರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿರುತ್ತಾರೆ. ಅಲ್ಲದೆ ಚುನಾವಣಾ ಫಲಿತಾಂಶದ ದಿವಸ ನಿಷೇಧಾಜ್ಞೆ ಉಲ್ಲಂಘಿಸಿ ಬಿಜೆಪಿ ಪಕ್ಷದ ಬಾವುಟ ಹಿಡಿದು ಉಜಿರೆ ಪೇಟೆಯಲ್ಲಿ ವಿಜಯೋತ್ಸವ ನಡೆಸಿರುತ್ತಾರೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು. ಅಲ್ಲದೆ ವಿಡಿಯೋ ತುಣುಕಿನ ಸಿಡಿ, ಫೋಟೊಗಳನ್ನು ದಾಖಲೆಯಾಗಿ ನೀಡಿದ್ದರು.
ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದಂತೆ ಗ್ರಾಮ ಪಂಚಾಯತ್ ಸಿಬ್ಬಂದಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ಪ್ರಚಾರ ನಡೆಸುವುದು ಮತ್ತು ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದನ್ನು ನಿಷೇಧಿಸಲಾಗಿದೆ. ಆದರೆ ನಾಗೇಶ್ರ ನಿಯಮಗಳನ್ನು ಉಲ್ಲಂಘಿಸಿ ಭಾರತೀಯ ಜನತಾ ಪಕ್ಷದ ಪರವಾಗಿ ಪ್ರಚಾರ ನಡೆಸಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ. ಈ ನಿಟ್ಟಿನಲ್ಲಿ ಪಂಚಾಯತ್ ರಾಜ್ ಅಧಿ ನಿಯಮವನ್ನು ಉಲ್ಲಂಘಿಸಿ ಪಕ್ಷದ ಪರ ಕೆಲಸ ಮಾಡಿದ ಉಜಿರೆ ಗ್ರಾಮ ಪಂಚಾಯತ್ ಸಿಬಂದಿ ನಾಗೇಶ್ರವರನ್ನು ತಕ್ಷಣ ಕೆಲಸದಿಂದ ವಜಾ ಮಾಡಬೇಕೆಂದು ದೂರು ನೀಡಿದ್ದರು.