ಮಂಗಳೂರು: ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಮತ್ತೊಮ್ಮೆ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಗುರುಪುರ ಬ್ಲಾಕ್ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಮೊಹಿಯುದ್ದೀನ್ ಬಾವ ಅವರ ಜೊತೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಹಲವರನ್ನು ಕೆಲ ದಿನಗಳ ಹಿಂದೆಯೇ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇದೀಗ ಮೊಹಿಯುದ್ದೀನ್ ಬಾವ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಡಿರುವ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ಮೊಹಿಯುದ್ದೀನ್ ಬಾವ ಅವರು ತಮ್ಮ ವೈಫಲ್ಯದಿಂದ ಟಿಕೇಟ್ ತಪ್ಪಿದ ಕಾರಣಕ್ಕಾಗಿ ಪಕ್ಷ ತೊರೆದು ಬೇರೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಬಾವ ಅವರು ಬೇರೆ ಪಕ್ಷ ಸೇರ್ಪಡೆಯಾಗುವ ಮುಂಚಿತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನಂತರದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಅತ್ಯಂತ ಕೀಳು ಅಭಿರುಚಿಯ ಮಾತುಗಳನ್ನಾಡಿ ಹೀಯಾಳಿಸಿದ್ದು ತಿಳಿದಿರುವ ವಿಚಾರವಾಗಿದೆ ಎಂದು ಗುರುಪುರ ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ತಿಳಿಸಿದೆ.
ಈ ಪ್ರಕಟಣೆಯ ಮೂಲಕ ತಿಳಿಯಪಡಿಸುವುದೇನೆಂದರೆ, ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಕೆಲಸ ಮಾಡಿರುವ ಬಾವ ಅವರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡುವ ಪ್ರಮೇಯವೇ ಇರುವುದಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅವರು ನಮ್ಮ ನಾಯಕರ ಜೊತೆಗಿನ ಫೋಟೋಗಳು ಹಳೆಯದಾಗಿದೆ. ಹೀಗಾಗಿ ಕಾರ್ಯಕರ್ತರು ಯಾವುದೇ ನಕಲಿ ಸುದ್ದಿಗಳ ಕುರಿತು ಅನಗತ್ಯ ಚರ್ಚೆ ಮಾಡದಿರಲು ವಿನಂತಿಸಲಾಗಿದೆ. ಕಾರ್ಯಕರ್ತರೇ ನಮ್ಮ ಪಕ್ಷದ ಪಾಲಿನ ಶಕ್ತಿ ಹಾಗೂ ಕಾರ್ಯಕರ್ತರ ವಿಶ್ವಾಸಕ್ಕೆ ದೋಹವೆಸಗಿದವರನ್ನು ಪಕ್ಷಕ್ಕೆ ಮರಳಿ ಸೇರ್ಪಡೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಕಟಣೆ ನೀಡಿದೆ.