ಬೆಂಗಳೂರು: ಮಾಜಿ ಸಚಿವ ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಿಲಾಗಿದೆ. ಅದರಂತೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಸಲಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.
ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 12ರ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ ಎಂದು ವಿಧಾನಸಭೆ ಬುಲೆಟಿನ್ ಹೊರಡಿಸಿದೆ.
ದೇಶಪಾಂಡೆ ಅವರನ್ನು ಸ್ಪೀಕರ್ ಹುದ್ದೆಯನ್ನು ನಿಭಾಯಿಸಲು ಕೇಳಲಾಯಿತು. ಆದರೆ, ಅವರು ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಹುದ್ದೆಯನ್ನು ನಿರಾಕರಿಸಿದರು. ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಚ್ಕೆ ಪಾಟೀಲ್ ಅವರನ್ನು ಕೂಡ ಸ್ಪೀಕರ್ ಹುದ್ದೆಗೆ ಪಕ್ಷ ಪರಿಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನೂ ಸಂಪರ್ಕಿಸಲಾಗಿತ್ತು.