ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಇನ್ನೊಂದು ಸುತ್ತಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್ಐಎ ಬೆಳ್ಳಂಬೆಳಗ್ಗೆ ದಾಳಿ ಮಾಡಿ ಶೋಧ ಕಾರ್ಯಾಚರಣೆ ಕೈಗೊಂಡಿರುವ ಮಾಹಿತಿ ಬಂದಿದೆ. ಸಾಕಷ್ಟು ಮನೆ, ಕಚೇರಿ ಮತ್ತು ಒಂದು ಆಸ್ಪತ್ರೆ ಮೇಲೆ ದಾಳಿ ನಡೆಸಲಾಗಿದೆ.
ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಸಿಸದ ಪ್ರಕರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು ಎನ್ಐಎ ಕಾರ್ಯಾಚರಣೆ ನಡೆಸಿದೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲ ಹಣ ಬಳಕೆ ಗುಮಾನಿ ಮೇಲೆ ದಾಳಿ ನಡೆದಿದೆ. ನಿಷೇಧಿತ ಪಿಎಫ್ಐ ಕಾರ್ಯಕರ್ತರು ಹವಾಲ ಮೂಲಕ ಉಗ್ರರಿಗೆ ಹಣ ರವಾನಿಸದ ಮಾಹಿತಿಯಿದ್ದು, ಈ ಹವಾಲ ಜಾಲ ಭೇದಿಸಲು ಎನ್ಐಐ ಕಾರ್ಯಾಚರಣೆ ನಡೆಸುತ್ತಿದೆ.
ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪತ್ತೆಯಾಗಿದ್ದ ಫುಲ್ವಾರಿ ಶರೀಫ್ ಪ್ರಕರಣಕ್ಕೆ ದಕ್ಷಿಣ ಕನ್ನಡದ ನಂಟು ಇರುವುದು ತನಿಖೆಯಿಂದ ತಿಳಿದುಬಂದಿದೆ. ಇದು ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣ. ಈ ಮೂಲಕ ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಲಾಗಿತ್ತು.
ಇತ್ತೀಚೆಗೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಕಾರ್ಯಾಚರಣೆ ನಡೆಸಿದ ಎನ್ಐಎ ಕೆಲವರನ್ನು ಬಂಧಿಸಿ ಕರೆದೊಯ್ದುದೆ. ಅವರ ವಿಚಾರಣೆ ಬಳಿಕ ಸಿಕ್ಕಿದ ಮಾಹಿತಿಯನ್ನು ಅನುಸರಿಸಿ ಇನ್ನೊಂದು ಸುತ್ತಿನ ದಾಳಿ ನಡೆದಿದೆ ಎನ್ನಲಾಗಿದೆ.