ಉಡುಪಿ : ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿಯನ್ನು ಐದು ದಿನ ಬಂದ್ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾಹಿತಿ ನೀಡಿದ್ದಾರೆ.
ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆಯಂತೆ ಮಕ್ಕಳಲ್ಲಿ ಕೊರೊನಾ ಪತ್ತೆಯಾದರೆ ಆ ತರಗತಿ ಅಥವಾ ಆ ವಿಭಾಗವನ್ನು ಐದು ದಿನ ಬಂದ್ ಮಾಡಲಾಗುತ್ತದೆ. ಇಡೀ ಶಾಲೆಯನ್ನು ಬಂದ್ ಮಾಡುವ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದರು.
ಸರಕಾರದಿಂದ ಬಂದಿರುವ ನಿರ್ದೇಶನಗಳನ್ನು ಪಾಲನೆ ಮಾಡಲಾಗುತ್ತದೆ. ಜಿಲ್ಲೆಯ ತಜ್ಞರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿ ಗಳ ಜತೆ ಮಾತುಕತೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೆಲವು ನಿರ್ದೇಶನ ನೀಡಿದ್ದೇವೆ ಮತ್ತು ಅವರಿಂದ ವರದಿ ಪಡೆಯುತ್ತಿದ್ದೇವೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆ: ತಾತ್ಕಾಲಿಕ ಮುಚ್ಚುಗಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಅಧಿಕ ಪ್ರಮಾಣದಲ್ಲಿ ಕಂಡುಬರುವ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಮುಚ್ಚಲಾಗುವುದು. ಸದ್ಯ ಅಂತಹ ಪರಿಸ್ಥಿತಿ ಉದ್ಭವಿಸಿಲ್ಲ, ಲಘು ಪರಿಣಾಮ ಬೀರುವ ಪ್ರಕರಣಗಳಷ್ಟೇ ಕೆಲವೆಡೆ ವರದಿಯಾಗಿವೆ. ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ಪ್ರದೇಶದ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿ ಗಳಿಗೆ ಕೊರೊನಾ ಸೋಂಕು ಕಂಡು ಬಂದಲ್ಲಿ ವರದಿ ಮಾಡುವಂತೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.