ಉಡುಪಿ: ಪ್ರತಿ ಪಂಚಾಯಿತಿಯ ಪ್ರಸ್ತುತ ಪರಿಸ್ಥಿತಿ ಬಗ್ಗೆ ವಿವರವಾಗಿ ಮಾಹಿತಿ ಪಡೆದು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಆದ್ಯತೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಸೂಚಿಸಿದರು.
ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಕುಡಿಯುವ ನೀರಿನ ಪೂರೈಕೆ ಕುರಿತ ಉಡುಪಿ ವಿಧಾನಸಭಾ ಕ್ಷೇತ್ರದ ಪಿಡಿಒ ಮತ್ತು ಇಂಜಿನಿಯರುಗಳ ಸಭೆಯಲ್ಲಿ ಮಾತನಾಡಿದರು.
ಮಳೆ ಪ್ರಾರಂಭವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ವರೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಮತ್ತು ಇದಕ್ಕೆ ಸೂಕ್ತ ಆಡಳಿತಾತ್ಮಕ ಹಾಗೂ ಹಣಕಾಸು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಮಳೆಗಾಲದ ಪೂರ್ವ ಸಿದ್ಧತೆಯಾಗಿ ಚರಂಡಿಗಳ ಹೂಳು ತೆಗೆಯುವುದು, ದಾರಿದೀಪ ನಿರ್ವಹಣೆ, ಅಪಾಯಕಾರಿ ಮರಗಳ ತೆರವು ಸಹಿತ ತುರ್ತು ಸಂದರ್ಭಗಳಿಗೆ ಪೂರಕ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಹೇಳಿದರು.
ಸಾರ್ವಜನಿಕರ ಸಮಸ್ಯೆ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ವಾರದಲ್ಲಿ 3 ದಿನ ನಿಗದಿತ ಸಮಯದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸಮಯ ಮೀಸಲಿಟ್ಟು ಪರಿಹಾರ ಒದಗಿಸಲು ಕಾರ್ಯಶೈಲಿಯನ್ನು ಅಳವಡಿಸಿಕೊಳ್ಳ ಬೇಕು ಹಾಗೂ ಈ ಬಗ್ಗೆ ಪಂಚಾಯತ್ ನಲ್ಲಿ ಫಲಕ ಹಾಕಿ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಹೇಳಿದರು.
ಸಭೆಯಲ್ಲಿ ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ವಿಜಯಾ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್. ವಿ. ಇಬ್ರಾಹಿಂಪುರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ವೆಂಕಟೇಶ್ ಮೂರ್ತಿ, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ನೀಲಾವರ, ಆರೂರು ಪಂಚಾಯತ್ ಅಧ್ಯಕ್ಷರಾದ ಮಮತಾ ಶೆಟ್ಟಿ, ಚೇರ್ಕಾಡಿ ಪಂಚಾಯತ್ ಅಧ್ಯಕ್ಷರಾದ ರೇಖಾ ಭಟ್, ವಾರಂಬಳ್ಳಿ ಪಂಚಾಯತ್ ಅಧ್ಯಕ್ಷರಾದ ನಾಗವೇಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಇಂಜಿನಿಯರುಗಳು ಉಪಸ್ಥಿತರಿದ್ದರು.