ಕುಂದಾಪುರ: ಅಭಿವೃದ್ಧಿ ವಿಷಯದಲ್ಲಿ ಯಾವುದೇ ಜಾತಿ ಮತ ಭೇದವಿಲ್ಲದೆ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುತ್ತೇನೆ. ಸರಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಕ್ಷೇತ್ರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದು ಕುಂದಾಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಬಿಜೆಪಿ ಕುಂದಾಪುರ ಮಂಡಲದ ವತಿಯಿಂದ ಕೋಟೆಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಪಕ್ಷದ ವತಿಯಿಂದ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.
ನನ್ನ ಗೆಲುವಿಗಾಗಿ ಕಾರ್ಯಕರ್ತರು,ಹಗಲಿರುಳು ದುಡಿದಿದ್ದಾರೆ,ಹಗಲು ರಾತ್ರಿ ದುಡಿದ ಕಾರ್ಯಕರ್ತರು ಹಾಗೂ ನಾಯಕರಿಗೆ ಕೃತಜ್ಞತೆಗಳು ನಾನು ಕೇವಲ ಶಾಸಕನಲ್ಲ ನಿಮ್ಮಂತೆ ಒಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಅವರು ಹೇಳಿದರು.
ಕುಂದಾಪುರ ನಿಕಟಪೂರ್ವ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮಾತನಾಡಿ ಕುಂದಾಪುರದಲ್ಲಿ ಹಾಲಾಡಿ, ಕೋಟ,ಕೊಡ್ಗಿ ಎಂಬ ಮೂರು ಎತ್ತುಗಳಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕ್ಷೇತ್ರದಲ್ಲಿ ಮಾಡಿದ್ದೇವೆ ಇದರ ಫಲಿತಾಂಶ ಕೂಡ ಚುನಾವಣೆಯಲ್ಲಿ ಕಂಡಿದ್ದೇವೆ ಎಂದರು.
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ ಕುಂದಾಪುರದಲ್ಲಿ ಒಳ್ಳೆತನ ಗೆದ್ದಿದೆ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಸ್ಟಾರ್ ಪ್ರಚಾರಕರಾಗಿ ಚುನಾವಣೆಯಲ್ಲಿ ದುಡಿದು ತಮ್ಮದೇ ಸಹಪಾಠಿಯನ್ನು ಅತ್ಯಧಿಕ ಅಂತರದಿಂದ ಗೆಲುವು ಸಾಧಿಸುವಂತೆ ಮಾಡಿದ್ದಾರೆ ಎಂದು ಹೇಳಿದರು.
ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ,ಪ್ರಧಾನ ಕಾರ್ಯದರ್ಶಿ ಸದಾನಂದ ಬಳ್ಕೂರು,ಪ್ರಭಾರಿ ಶ್ಯಾಮಲಾ ಕುಂದರ್ , ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.ನೂತನ ಶಾಸಕರಾಗಿ ಆಯ್ಕೆಯಾಗಿರುವ ಕಿರಣ್ ಕುಮಾರ್ ಕೊಡ್ಗಿ ಮತ್ತು ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ,ಶಂಕರ ಅಂಕದ ಕಟ್ಟೆ ಅವರನ್ನು ಪಕ್ಷದ ವತಿಯಿಂದ ಸನ್ಮಾನಿಸಲಾಯಿತು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸ್ವಾಗತಿಸಿದರು.ಸತೀಶ್ ಪೂಜಾರಿ ನಿರೂಪಿಸಿದರು.ಸುರೇಂದ್ರ ಸಂಗಮ್ ವಂದಿಸಿದರು.