ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಸಿಎಂ ಸಿದ್ದರಾಮಯ್ಯ ಎಲ್ಲಾ ಸಾಧಕ ಬಾಧಕಗಳನ್ನು ಚರ್ಚೆ ಮಾಡಿದ್ದಾರೆ. ನಾಳೆ ಸಚಿವರ ಜೊತೆ ಸಮಾಲೋಚನೆ ನಡೆಯಲಿದ್ದು ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಮೇ 29ರಂದು ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಶಕ್ತಿಭವನದಲ್ಲಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಸಾರಿಗೆ, ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೌಶಲ್ಯಾಭಿವೃದ್ಧಿ, ಇಂಧನ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಯಾವ ಗ್ಯಾರಂಟಿ ಯೋಜನೆ ಜಾರಿಗೆ ಎಷ್ಟು ಹಣ ಖರ್ಚಾಗುತ್ತದೆ? ಫಲಾನುಭವಿಗಳ ಸಂಖ್ಯೆ ಎಷ್ಟು? ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು. ಷರತ್ತುಗಳೊಂದಿಗೆ ಬಿಪಿಎಲ್ ಕುಟುಂಬದವರಿಗೆ ಗೃಹಲಕ್ಷ್ಮೀ ಗ್ಯಾರಂಟಿ ನೀಡುವ ಸಾಧ್ಯತೆ ಇದೆ. ಆದರೆ ರಾಜ್ಯದ ಪ್ರತೀ ಮನೆಯೊಡತಿಗೆ 2000 ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಕಾಂಗ್ರೆಸ್, ಸದ್ಯ ಮಾತು ಉಳಿಸಿಕೊಳ್ಳಬೇಕಾದ ಒತ್ತಡದಲ್ಲಂತೂ ಇದೆ.