ಚಿಕಮಗಳೂರು: ಕಾಂಗ್ರೆಸ್ನವರಿಗೆ ದಲಿತರ ಹಾಗೂ ಅಲ್ಪಸಂಖ್ಯಾತರ ಮತ ಮಾತ್ರ ಬೇಕು. ಆದರೆ ಮುಖ್ಯಮಂತ್ರಿ ಸ್ಥಾನ ಕೊಡಲು ದಲಿತರು ಹಾಗೂ ಅಲ್ಪಸಂಖ್ಯಾತರು ಬೇಡವಾಗಿದೆ. ಇವರು ದಲಿತ ಮತ್ತು ಅಲ್ಪಸಂಖ್ಯಾತರ ಪರವಾದ ಪಕ್ಷ ಎಂದು ಹೇಗೆ ನಂಬುವುದು ಎಂದು ಜೆಡಿಎಸ್ ಮುಖಂಡ ಎಂ.ಸಿ.ಹೂವಪ್ಪ ಪ್ರಶ್ನಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನದಡಿ ಯಲ್ಲಿ ಚುನಾವಣೆ ಎದುರಿಸಿ ಕಾಂಗ್ರೆಸ್ ಜಯಬೇರಿ ಬಾರಿಸುವ ಮೂಲಕ ಬಹುಮತ ಪಡೆದಿದೆ. ಆದರೆ ಈಗ ಮುಖ್ಯಮಂತ್ರಿ ಸ್ಥಾನಕ್ಕೆ ಒಕ್ಕಲಿಗ ಹಾಗೂ ಕುರುಬ ಸಮುದಾಯದ ಜನರು ಕಿತ್ತಾಟ ನಡೆಸುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ನ್ನು ಗೆಲ್ಲಿಸಲು ಶೇ.೮೦ ರಷ್ಟು ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ಗೆ ಮತ ಚಲಾಯಿಸಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿದೆ. ಹಾಗಾಗಿ ದಲಿತ ಮತ್ತು ಅಲ್ಪಸಂಖ್ಯಾತರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲಿ ಮುಖ್ಯಮಂತ್ರಿಯಾಗುತ್ತಾರೋ ಎಂಬ ಕಾರಣಕ್ಕೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿ ದೂರವಿಟ್ಟಿದ್ದಾರೆ. ಹಿಂದೆ ಜಿ.ಪರಮೇಶ್ವರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಇವರಿಬ್ಬರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು.
ಆದರೂ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಲಿಲ್ಲ. ಇಂತಹ ಧೋರಣೆ ಜನತೆ ಅರಿಯಬೇಕಿದೆ. ಈ ಬಾರಿ ದಲಿತ ಮುಖಂಡರು ಹಾಗೂ ಅಲ್ಪಸಂಖ್ಯಾತರಲ್ಲಿ ಯು.ಟಿ.ಖಾದರ್, ಜಮೀರ್ ಅಹಮ್ಮದ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷ ರೆಹಮಾನ್, ಮುಖಂಡ ದೇಜಪ್ಪ ಉಪಸ್ಥಿತರಿದ್ದರು.