ಚಾಮರಾಜನಗರ: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಗ್ರಾಮದ ಕೆ.ಎನ್.ಮಹೇಶ(38) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ಈತ ಬೇಗೂರು ಹೋಬಳಿಯ ತಗ್ಗಲೂರು ಗ್ರಾಮದ ನಿವಾಸಿಯೊಬ್ಬರ ಜಮೀನಿಗೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ. ಮರ್ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಿಸಲಾಗಿದೆ. ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿಗೆ ಜೀವನಾಂಶ ಕೊಡಲಾಗದೆ ಆತ್ಮಹತ್ಯೆ
ಮತ್ತೊಂದು ಪ್ರಕರಣದಲ್ಲಿ ಕೌಟುಂಬಿಕ ಕಲಹದಿಂದಾಗಿ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮೈಸೂರಪ್ಪನ ದೊಡ್ಡಿಯಲ್ಲಿ ನಡೆದಿದ್ದು, ರಾಚಪ್ಪ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನು.
ಈತನ ಕುಟುಂಬದಲ್ಲಿ ಮನಸ್ತಾಪ ಉಂಟಾಗಿ ಕೌಟಂಬಿಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಪತ್ನಿಗೆ ಜೀವನಾಂಶವನ್ನು ಪ್ರತಿ ತಿಂಗಳು ನ್ಯಾಯಾಲಯದಲ್ಲಿ ಪಾವತಿ ಮಾಡಲು ನ್ಯಾಯಾಲಯವು ಆದೇಶಿಸಿತ್ತು. ಆದರೆ ಪತ್ನಿಯ ಜೀವನಾಂಶ ಪಾವತಿಸಲಾಗದ ಸ್ಥಿತಿಯಲ್ಲಿದ್ದ ರಾಚಪ್ಪ ಬೇಸತ್ತು ತನ್ನ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.