ಮೈಸೂರು: ಬೆಂಗಳೂರಿಗೆ ಉಗ್ರರ ದಾಳಿ ಸಾಧ್ಯತೆಯಿದೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ವರದಿಯ ಹಿನ್ನಲೆಯಲ್ಲಿ ಮೈಸೂರಿನಲ್ಲೂ ಹೈ ಅಲರ್ಟ್ ಘೋಷಿಸಲಾಗಿದ್ದು, ರೈಲ್ವೆ ನಿಲ್ದಾಣ ಪ್ರವಾಸಿ ತಾಣಾ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ರಾಜ್ಯದ್ಯಾಂತ ಮುನ್ನೆಚ್ಚರಿಕ ಕ್ರಮವಾಗಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿರುವ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಿರುವಂತೆ ಮೈಸೂರಿನಲ್ಲೂ ಹೆಚ್ಚುವರಿ ಪೊಲೀಸ್ ಪಡೆಯನ್ನು ಭದ್ರತೆಗೆ ನಿಯೋಜಿಸಲಾಗಿದೆ. 12 ಕೆಎಸ್ಆರ್ ಪಿ ತುಕಡಿ, 10 ಸಿಎಆರ್ ತುಕಡಿ, 40 ಮಂದಿ ಕಮಾಂಡೋ ಪಡೆ ಬಾಂಬ್ ಪತ್ತೆ ದಳ, ಶ್ವಾನ ದಳದ ಸಿಬ್ಬಂದಿಗಳನ್ನು ಸಿವಿಲ್ ಪೊಲೀಸರ ಜತೆಗೆ ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ.
ಮೈಸೂರಿನ ರೈಲ್ವೆ ನಿಲ್ದಾಣ, ಐತಿಹಾಸಿಕ ಅಂಬಾ ವಿಲಾಸ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಕೃಷ್ಣರಾಜ ಸಾಗರ(ಕೆಆರ್ ಎಸ್), ಸಿಎಫ್ ಟಿಆರ್ ಐ, ಡಿಎಫ್ಆರ್ ಎಲ್ ಸೇರಿದಂತೆ ಕೆಲವೊಂದು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಆರ್ ಪಿಎಫ್ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ದಿನದ 24 ಗಂಟೆಯೂ ಮೈಸೂರು ನಗರದಾದ್ಯಂತ ಇನ್ಸ್ಪೆಕ್ಟರ್ ಮಟ್ಟದ ಅಧಿಕಾರಿಗಳು ಪಿಕೆಟಿಂಗ್ ಮಾಡಿ ಭದ್ರತಾ ವ್ಯವಸ್ಥೆ ಮೇಲ್ವಿಚಾರಣೆಗೆ ನಿಯೋಜಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ. ಹೆಚ್.ಟಿ. ಶೇಖರ್ ತಿಳಿಸಿದ್ದಾರೆ.