ಚಾಮರಾಜನಗರ: ಸತ್ಯ, ಅಹಿಂಸೆಯ ಮಾರ್ಗದಲ್ಲಿ ಸಾಗಿದ ಗಾಂಧೀಜಿ ಅವರು ತಮ್ಮ ಆದರ್ಶಗಳಿಂದಲೇ ಜಗತ್ತಿನಲ್ಲೇ ವಿಶೇಷ ಸ್ಥಾನ ಪಡೆದಿದ್ದಾರೆ ಎಂದು ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಭಾರತ ಸೇವಾದಳದ ಜಿಲ್ಲಾಧ್ಯಕ್ಷರಾದ ಎಂ. ರಾಮಚಂದ್ರ ಹೇಳಿದ್ದಾರೆ.
ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆಯ ಅಂಗವಾಗಿ ಭಾರತ ಸೇವಾದಳ ಜಿಲ್ಲಾ ಸಮಿತಿ ವತಿಯಿಂದ ನಗರದ ಸೇವಾದಳ ಕಚೇರಿಯಲ್ಲಿ ನಡೆದ ಹುತಾತ್ಮ ದಿನಾಚರಣೆಯಲ್ಲಿ ಮೌನಾಚರಣೆ ಸಲ್ಲಿಸಿ, ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು ಸರ್ಕಾರ ಗಾಂಧೀಜಿಯವರು ಮಡಿದ ದಿನವನ್ನು ಹುತಾತ್ಮ ದಿನಾಚರಣೆಯಾಗಿ ಆಚರಿಸುತ್ತಿದೆ ಎಂದರು.
ವಿದ್ಯಾರ್ಥಿಗಳಿಗೆ ತರಬೇತಿ, ಶಿಕ್ಷಣ, ಸೇವೆ, ರಾಷ್ಟ್ರೀಯತೆ, ಸಾರ್ವಜನಿಕ ರಕ್ಷಣೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಕ್ರಮಗಳು ಸೇವಾದಳದ ಮೂಲಕ ನಡೆಯುತ್ತಿದ್ದು ಗಾಂಧೀಜಿಯವರ ತತ್ವ ಸಿದ್ಧಾಂತಗಳು ಈ ಎಲ್ಲಾ ಕಾರ್ಯಕ್ರಮಗಳಿಗೆ ಆದರ್ಶವಾಗಿದೆ ಎಂದರು.
ಪ್ರತಿಯೊಬ್ಬ ಭಾರತೀಯನು ಅಹಿಂಸೆಯ ಮಾರ್ಗದಲ್ಲಿ ಸಾಗುವುದರ ಜೊತೆಗೆ ಗಾಂಧೀಜಿಯವರ ಸೇವಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು. ಮಹಾತ್ಮರು 18 ರಚನಾತ್ಮಕ ಕಾರ್ಯಕ್ರಮಗಳನ್ನು ಸೇವಾದಳದ ಸೈನಿಕರಿಗೆ ನೀಡಿದ್ದು, ಅದನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮನವರಿಕೆ ಮಾಡಿಕೊಟ್ಟರು.
ಭಾರತ ಸೇವಾದಳದ ತಾಲ್ಲೂಕು ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ ಮಾತನಾಡಿ ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿಯವರು ಪ್ರಾಣತ್ಯಾಗ ಮಾಡಿ 74 ವರ್ಷಗಳು ಸಂದಿದೆ, ಮಹಾತ್ಮ ಗಾಂಧಿಯವರ ಸತ್ಯ ಮತ್ತು ಅಹಿಂಸೆಯ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬರು ಐಕ್ಯತೆ ಮನೋಭಾವದಿಂದ ಬದುಕಿ, ಕೋಮು ಸೌಹಾರ್ದತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಯೋಚಿಸಿ ಪ್ರಬುದ್ಧ ಭಾರತ ನಿರ್ಮಾಣ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಸದಸ್ಯರಾದ ನಾಗರಾಜು, ಜಿಲ್ಲಾ ಕಾರ್ಯದರ್ಶಿಯಾದ ಬಸವಣ್ಣ, ವೈ.ಎಂ.ಮಂಜುನಾಥ್, ವಲಯ ಸಂಘಟಕರಾದ ಕೆ.ಈರಯ್ಯ ಭಾಗವಹಿಸಿದ್ದರು.