ಮಂಡ್ಯ: ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 84 ಅಡಿಗೆ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯದ ನೀರಿನ ಮಟ್ಟ 18 ಅಡಿ ಕಡಿಮೆಯಾಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಭಾನುವಾರ 84.80 ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಡ್ಯಾಂನಲ್ಲಿ 102.80 ಅಡಿ ನೀರು ಸಂಗ್ರಹವಾಗಿತ್ತು. ಸದ್ಯ ಜಲಾಶಯಕ್ಕೆ 508 ಕ್ಯೂಸೆಕ್ ಒಳಹರಿವಿದ್ದು ಜಲಾಶಯದಿಂದ 3726 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
ಕಳೆದ ವರ್ಷ ಇದೇ ದಿನ ಜಲಾಶಯದ ಒಳಹರಿವು 16814 ಕ್ಯೂಸೆಕ್ ಇದ್ದರೆ, 6242 ಕ್ಯೂಸೆಕ್ ನೀರು ಬಿಡಲಾಗಿತ್ತು. ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿತ್ತು. ಇದರಿಂದ ಬೇಸಿಗೆ ಕಾಲದಲ್ಲಿಯೇ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿತ್ತು. ಈ ಬಾರಿ ಮಳೆ ಕೊರತೆಯಿಂದ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗತೊಡಗಿದೆ. ಪ್ರಸ್ತುತ ಜಲಾಶಯದಲ್ಲಿ ಸಂಗ್ರಹವಾಗಿರುವ ಕುಡಿಯಲು ನೀರಿಗೆ ಸಾಕಾಗುಷ್ಟು ಸಂಗ್ರಹವಿದೆ. ಬೇಸಿಗೆ ಮುಗಿಯುವವರೆಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವುದಿಲ್ಲ. ನಿರೀಕ್ಷೆಯಂತೆ ಮುಂಗಾರು ಮಳೆ ಬಂದರೆ ರೈತರಿಗೆ ನಿರಾಳವಾಗಲಿದೆ. ಕೃಷಿ ಚಟುವಟಿಕೆ ಆರಂಭಿಸಲು ಮುಂದಾಗಿರುವ ರೈತರು ಇದೀಗ ಮುಂಗಾರು ಮಳೆಯತ್ತ ಮುಖ ಮಾಡಿದ್ದಾರೆ.