ನಂಜನಗೂಡು: ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಶಾಸಕ ಎಂ.ಆರ್.ಕೃಷ್ಣಮೂರ್ತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು 19 ವರ್ಷಗಳ ನಂತರ ವಿಧಾನ ಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ದೇವಾಲಯಕ್ಕೆ ಆಗಮಿಸಿದ ಶಾಸಕರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಶ್ರೀ ನಂಜುಂಡೇಶ್ವರ ಸ್ವಾಮಿ, ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ, ನಾರಾಯಣಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಸಚಿವ ಸ್ಥಾನವನ್ನು ವರಿಷ್ಠರು ನಿರ್ಧರಿಸುತ್ತಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಕಾಂಗ್ರೆಸ್ ಸಂಸದರನ್ನು ಕಳುಹಿಸಲು ಸಮರ್ಥ ಮುಖ್ಯ ಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಸಿದ್ದರಾಮಯ್ಯ ರವರ ಅಭಿವೃದ್ಧಿ ಕಾರ್ಯಗಳು ಹಾಗೂ ಹಲವು ಜನಪರ ಯೋಜನೆಗಳು ನಮಗೆ ಕೈ ಹಿಡಿದಿವೆ. ಈ ಬಾರಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ನಗರ ಅಧ್ಯಕ್ಷ ಶಂಕರ್, ಜಯಮಾಲಾ ಬೀರೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.