ಮೈಸೂರು: ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರವಾದ ಮೈಸೂರಿನ ವರುಣಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಮತಯಾಚಿಸುವ ಮೂಲಕ ಚುನಾವಣಾ ಕಣಕ್ಕೆ ಕಿಚ್ಚು ಹಚ್ಚಿದರು. ಅಲ್ಲದೇ ಚುನಾವಣೆಯಲ್ಲಿ ಗೆದ್ದರೆ ಸೋಮಣ್ಣ ಸಿಎಂ ಅಭ್ಯರ್ಥಿ ಎಂಬ ಸುಳಿವು ನೀಡಿದರು.
ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೊಸಕೋಟೆಯಲ್ಲಿ ಬಿಜೆಪಿ ಮಂಗಳವಾರ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ವರುಣ ಕ್ಷೇತ್ರದಿಂದ ಸಚಿವ ವಿ.ಸೋಮಣ್ಣ ಅವರನ್ನು ಗೆಲ್ಲಿಸಿ ಕಳುಹಿಸಿದರೆ ಅವರನ್ನು ದೊಡ್ಡ ವ್ಯಕ್ತಿಯಾಗಿ ಮಾಡುತ್ತೇವೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯದ ಮುಖ್ಯಮಂತ್ರಿ ರೇಸ್ನಲ್ಲಿ ವಿ.ಸೋಮಣ್ಣ ಕೂಡ ಇದ್ದಾರೆ ಎಂಬ ಸುಳಿವು. ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಸಿಎಂ ಚರ್ಚೆ ಜೋರಾಗಿ ನಡೆಯುತ್ತಿದೆ. ಸಚಿವ ವಿ.ಸೋಮಣ್ಣ ಕೂಡ ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಇಂತಹ ಸಮಯದಲ್ಲಿ ಅಮಿತ್ ಷಾ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸುವ ಜತೆಗೆ ನಾನಾ ಚರ್ಚೆ ಹುಟ್ಟು ಹಾಕಿದೆ.
ಸೋಮಣ್ಣ ಅವರನ್ನು ಗೆಲ್ಲಿಸಿ ನಾವು ಅವರನ್ನು ದೊಡ್ಡ ವ್ಯಕ್ತಿಯಾಗಿ ಮಾಡುತ್ತೇವೆ. ನಿಮ್ಮ ಒಂದು ಮತದಿಂದ ಇಡೀ ರಾಜ್ಯ ಸುರಕ್ಷಿತವಾಗಿರುತ್ತದೆ. ಕರ್ನಾಟಕವನ್ನು ಸಮೃದ್ಧ ಹಾಗೂ ಸುರಕ್ಷಿತ ರಾಜ್ಯವಾಗಿ ಮಾಡುವ ಏಕೈಕ ವ್ಯಕ್ತಿಯೆಂದರೆ ಅದು ಪ್ರಧಾನಿ ನರೇಂದ್ರ ಮೋದಿ ಮಾತ್ರ ಎಂದರು.
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶವನ್ನು ಸುರಕ್ಷಿತವಾಗಿ ಇಡುವ ಕೆಲಸ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿಸುವ ಕೆಲಸ ಆರಂಭಿಸಿದ್ದಾರೆ. ಪಾಕಿಸ್ತಾನ ನಮ್ಮ ಕಾಶ್ಮೀರದ ಮೇಲೆ ದಾಳಿ ನಡೆಸಿದ್ದ ವೇಳೆ ನಮ್ಮ ಮೋದಿ ಅವರು ಪಾಕಿಸ್ತಾನದ ಮೇಲೆ ಸರ್ಜಿಕಲ ಸ್ಟ್ರೈಕ್ ಮಾಡುವ ಮೂಲಕ ಉತ್ತರ ನೀಡಿದರು. ಕಾಂಗ್ರೆಸ್ ಪಾರ್ಟಿ ಈ ದೇಶವನ್ನು ಸುರಕ್ಷಿತವಾಗಿ, ಸಮೃದ್ಧವಾಗಿ ಇಡುತ್ತಾ?, ಕರ್ನಾಟಕ ರಾಜ್ಯವನ್ನು ಭ್ರಷ್ಟಮುಕ್ತ ರಾಜ್ಯ ಮಾಡಲಿದೆಯೇ? ರಾಜ್ಯವನ್ನು ಅಭಿವೃದ್ಧಿ ಪಡಿಸಲಿದೆಯೇ? ಎಂದು ಪ್ರಶ್ನಿಸಿದರು.
ವರುಣ ಮತದಾರರು ಸಿದ್ದರಾಮಯ್ಯ ಅವರಿಗೆ ಏಕೆ ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ ಅಮಿತ್ ಷಾ, ನಮ್ಮ ಅಭ್ಯರ್ಥಿ ಸೋಮಣ್ಣ ಅವರನ್ನು ಗೆಲ್ಲಿಸಿದರೆ, ವರುಣ ಕ್ಷೇತ್ರವನ್ನು ಇಡೀ ರಾಜ್ಯದಲ್ಲೇ ಮಾದರಿ ಕ್ಷೇತ್ರ ಮಾಡುತ್ತೇನೆ ಎಂದರು. 2024ಕ್ಕೂ ಮತ್ತೆ ಮೋದಿ ಅವರನ್ನೇ ಪ್ರಧಾನಿ ಮಾಡಿ ಎಂದು ಕೋರಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿಯನ್ನು ನಿಲ್ಲಿಸಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಆ ಕಾಮಗಾರಿ ಮತ್ತೆ ಪ್ರಾರಂಭವಾಯಿತು. ಜತೆಗೆ ಮಂಡ್ಯದ ಮೈಷುಗರ್ ಕಾರ್ಖಾನೆಯನ್ನು ಮುಚ್ಚುವ ಪ್ರಯತ್ನ ಮಾಡಿದ್ದರು ಎಂದು ದೂರಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ, ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ, ನಂಜನಗೂಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಹರ್ಷವರ್ಧನ್, ತಿ. ನರಸೀಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರೇವಣ್ಣ, ಮಾಜಿ ಸಂಸದ, ನಟ ಶಶಿಕುಮಾರ್, ಮಾಜಿ ಸಚಿವ ಎಂ.ಶಿವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್, ಮುಖಂಡರಾದ ಎಲ .ರೇವಣ್ಣಸಿದ್ದಯ್ಯ, ಕಾ.ಪು. ಸಿದ್ದಲಿಂಗಸ್ವಾಮಿ, ಎಸ್. ಮಹದೇವಯ್ಯ, ಎಂ. ಅಪ್ಪಣ್ಣ, ಮೈಸೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಸದಾನಂತ, ದೇವನೂರು ಪ್ರತಾಪ್ ಇತರರಿದ್ದರು.