News Karnataka Kannada
Thursday, April 25 2024
Cricket
ಮೈಸೂರು

ವರುಣಾ ಸಿದ್ದರಾಮಯ್ಯರ ಅದೃಷ್ಟದ ಕ್ಷೇತ್ರ!

Varuna is siddaramaiah's lucky constituency!
Photo Credit : By Author

ಮೈಸೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದ್ದ ವರುಣಾ ಕ್ಷೇತ್ರ ಮತ್ತೆ ಅದೃಷ್ಟದ ಕ್ಷೇತ್ರ ಎಂದು ಸಾಬೀತು ಮಾಡಿದೆ. ಸಿದ್ದರಾಮಯ್ಯ ಅವರು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು.

ಈ ಬಾರಿ ಕೊನೆಯ ಚುನಾವಣೆಯಾದ್ದರಿಂದ ಗೆಲುವಿನೊಂದಿಗೆ ನಿವೃತ್ತಿಯಾಗಲು ಬಯಸಿದ್ದ ಸಿದ್ದರಾಮಯ್ಯ ಅವರು ಸುರಕ್ಷಿತ ಕ್ಷೇತ್ರದ ಹುಡುಕಾಟದಲ್ಲಿದ್ದರು. ಅದಕ್ಕಾಗಿಯೇ ವರುಣಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು. ಅವರ ನಿರೀಕ್ಷೆಯಂತೆಯೇ ಗೆಲುವು ಲಿಭಿಸಿತ್ತು. ಇದೀಗ ಸಿಎಂ ಸ್ಥಾನವೂ ಒಲಿದು ಬಂದಿದ್ದು, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಪುನರ್‌ವಿಂಗಡಣೆಯಾಗಿ ವರುಣ ಅಸ್ತಿತ್ವಕ್ಕೆ ಬಂದ ಇದುವರೆಗೆ ನಾಲ್ಕು ಚುನಾವಣೆಗಳು ನಡೆದಿದ್ದು, ಅದರಲ್ಲಿ ಸಿದ್ದರಾಮಯ್ಯ ಮೂರು ಬಾರಿ ಆಯ್ಕೆಯಾಗಿದ್ದಾರೆ. 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಗೆದ್ದಾಗ ಸಿದ್ದರಾಮಯ್ಯ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ದೊರಕಿತ್ತು. 2013ರ ಚುನಾವಣೆಯಲ್ಲಿ ವರುಣದಿಂದಲೇ ಗೆದ್ದ ಅವರು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ರಚಿಸಿ, ಐದು ವರ್ಷಗಳ ಕಾಲ ಅಧಿಕಾರ ನಡೆಸಿದ್ದರು. ಇದೀಗ, ದಶಕದ ಬಳಿಕ, ವರುಣ ಕ್ಷೇತ್ರದ ಮೂಲಕವೇ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗುತ್ತಿದ್ದಾರೆ. ಎರಡನೇ ಬಾರಿಗೆ ಸಿಎಂ: 1983ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ನಾಲ್ಕು ದಶಕದ ಬಳಿಕ ಅವರು ಎರಡನೇ ಬಾರಿಗೆ ರಾಜ್ಯದ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಕ್ಷೇತ್ರದಲ್ಲಿ ನಡೆದ ಏಳು ಚುನಾವಣೆಯಲ್ಲಿ ಸ್ಪರ್ಧಿಸಿ ನಾಲ್ಕರಲ್ಲಿ ಗೆದ್ದಿದ್ದರು. ರಾಜಕೀಯ ಪುನರ್ಜನ್ಮ ಎಂದು ಅವರೇ ಕರೆದುಕೊಳ್ಳುವ 2006ರ ಉಪಚುನಾವಣೆಯಲ್ಲೂ ಗೆದ್ದಿದ್ದರು. ವರುಣದಲ್ಲಿ ಮೂರು ಚುನಾವಣೆಗಳಲ್ಲಿ ಗೆದ್ದಿದ್ದಾರೆ.

1978ರಲ್ಲಿ ಮೈಸೂರು ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಸಿದ್ದರಾಮಯ್ಯ, ರೈತಸಂಘ, ಸಮಾಜವಾದಿ ಹೋರಾಟದೊಂದಿಗೆ ಗುರುತಿಸಿಕೊಂಡಿದ್ದರು. 1983ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದಾಗ ಅವರಿಗೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಸ್ಥಾನ ದೊರಕಿತ್ತು. ನಂತರ ರೇಷ್ಮೆ ಖಾತೆ ಸಚಿವರಾಗಿದ್ದರು. 1985ರ ಮಧ್ಯಂತರ ಚುನಾವಣೆಯಲ್ಲಿ ಗೆದ್ದ ಬಳಿಕ ಪಶುಸಂಗೋಪನಾ ಸಚಿವರಾಗಿದ್ದರು. ಎಸ್.ಆರ್.ಬೊಮ್ಮಾಯಿ ಸರ್ಕಾರದಲ್ಲಿ ಸಾರಿಗೆ ಸಚಿವರೂ ಆಗಿದ್ದರು.

1994ರಲ್ಲಿ ಜನತಾದಳ ಅಭ್ಯರ್ಥಿಯಾಗಿ ಗೆದ್ದ ಅವರು, ಎಚ್.ಡಿ.ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವರಾದರು. 1996ರಲ್ಲಿ ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿ ಆಯ್ಕೆಯಾದಾಗ ಹಾಗೂ 2004ರಲ್ಲಿ ಎನ್.ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದರು. 2013ರಿಂದ 2018ರವರೆಗೆ ಸಿದ್ದರಾಮಯ್ಯನವರು ಪೂರ್ಣ ಪ್ರಮಾಣದಲ್ಲಿ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಬಾರಿಗೆ ಸಿಎಂ ಪಟ್ಟ ಅಲಂಕರಿಸುತ್ತಿದ್ದಾರೆ.

ಮೈಸೂರಿನಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದವರಲ್ಲಿ ಸಿದ್ದರಾಮಯ್ಯ ಎರಡನೆಯವರು. 1972ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಹುಣಸೂರಿನ ಡಿ.ದೇವರಾಜ ಅರಸು ಐದು ವರ್ಷ ಆಡಳಿತ ನಡೆಸಿ ಅವಧಿ ಪೂರ್ಣಗೊಳಿಸಿದ್ದರು. 1978ರಲ್ಲಿ ಎರಡನೇ ಬಾರಿಗೆ ಆಯ್ಕೆಯಾದಾಗ ಅವಧಿ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ದಶಕದ ಬಳಿಕ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಬಾರಿ ಅವಧಿ ಪೂರ್ಣಗೊಳಿಸಿದ್ದ ಅವರು ಅಧಿಕಾರ ಹಂಚಿಕೆ ಸೂತ್ರದಂತೆ ಈ ಬಾರಿ ಎರಡೂವರೆ ವರ್ಷ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಅವರು ಅಧಿಕಾರ ಹಸ್ತಾಂತರ ಮಾಡುತ್ತಾರೋ, ಇಲ್ಲವೇ ಮುಂದುವರಿಸುತ್ತಾರೋ ಕಾದು ನೋಡಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು